ಜಿಲ್ಲೆಯಲ್ಲಿ ಎಚ್1ಎನ್1 ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ:
Team Udayavani, Feb 18, 2020, 5:25 AM IST
ಉಡುಪಿ: ಜಿಲ್ಲೆಯಲ್ಲಿ ಎಚ್1ಎನ್1 ರೋಗದಿಂದ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರೋಗದ ಲಕ್ಷಣಗಳು, ಹರಡುವಿಕೆ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಜಿಲ್ಲಾ ಸರ್ವೇಕ್ಷಣ ಘಟಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2019ರಲ್ಲಿ 424 ಎಚ್1ಎನ್1 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 10 ಮಂದಿ ಮೃತಪಟ್ಟಿದ್ದು, 2020 ನೇ ಸಾಲಿನಲ್ಲಿ ಫೆಬ್ರವರಿ ವರೆಗೆ 55 ಪ್ರಕರಣಗಳು ದಾಖಲಾಗಿದ್ದು ಈ ತನಕ ಯಾರೂ ಸಾವನ್ನಪ್ಪಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ ಸಭೆಗೆ ತಿಳಿಸಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಎಚ್1ಎನ್1 ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರಲ್ಲಿ ಈ ರೋಗದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜಪಾನೀಸ್ ಎನ್ಸೆಫಲೈಟಿಸ್ ರೋಗದ 5 ಪ್ರಕರಣಗಳು ಕಂಡುಬಂದಿದ್ದು, ಇದರಲ್ಲಿ 1 ಸಾವು ದಾಖಲಾಗಿದೆ. ಚಿಕೂನ್ಗುನ್ಯದ 7 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 4 ಜನರಲ್ಲಿ ರೋಗ ಲಕ್ಷಣ ಗಳಿರುವುದು ದೃಢಪಟ್ಟಿದೆ. ಹಿಂದಿನ ಸಾಲಿಗೆ ಹೋಲಿಸಿದಾಗ ಈ ಸಾಲಿನಲ್ಲಿ ಮಲೇರಿಯಾ ರೋಗದ ಪ್ರಕರಣಗಳು ಕಮ್ಮಿ ಇವೆ. ಡೆಂಗ್ಯೂ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚಿದ್ದು, ಉಡುಪಿಯಲ್ಲಿ ಈ ಸಾಲಿನಲ್ಲಿ ಒಟ್ಟು 25 ಪ್ರಕರಣಗಳು ದಾಖಲಾಗಿವೆ. ರೋಗಗಳು ಸೊಳ್ಳೆಯಿಂದ ಹರಡುವುದರಿಂದ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡಿ, ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕೀಟ ಜನ್ಯ ರೋಗ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್ ಭಟ್ ತಿಳಿಸಿದರು.
ಉಡುಪಿ ನಗರದಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿರುವ ಕಡೆಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಾಗಿ ರೋಗಗಳು ಹರಡದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ|ಚಿದಾನಂದ ಸಂಜು ಮಂಗನ ಕಾಯಿಲೆ ಬಗ್ಗೆ ಮಾಹಿತಿ ನೀಡಿ, ಈ ಕಾಯಿಲೆಯು ಮಂಗನಿಂದ ಮನುಷ್ಯರಿಗೆ ಉಣ್ಣಿಯ ಮೂಲಕ ಹರಡುತ್ತದೆ. ಅರಣ್ಯ ಪ್ರದೇಶದಲ್ಲಿ ವಾಸಿಸುವ ಮತ್ತು ಕೆಲಸ ಕಾರ್ಯನಿಮಿತ್ತ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡುವ ಜನರಿಗೆ ಉಣ್ಣಿ ಕಚ್ಚಿದಾಗ ವೈರಸ್ಗಳು ಮನುಷ್ಯರ ದೇಹದೊಳಗೆ ಪ್ರವೇಶಿಸುತ್ತವೆ. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಎರಡು ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಮಂಗನ ಕಾಯಿಲೆಯಿಂದ ಬಳಲುವ ವಿವಿಧ ಜಿಲ್ಲೆಗಳ 8 ಜನರು ಕೆ.ಎಂ. ಸಿಯಲ್ಲಿ ದಾಖಲಾಗಿದ್ದು, ಅದರಲ್ಲಿ 1 ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಮಂಗಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದರು.
ಜಿಲ್ಲೆಯಲ್ಲಿ ಕೊರೊನಾ ರೋಗದ ಯಾವುದೇ ಪ್ರಕರಣ ಇಲ್ಲ. ಚೀನದಿಂದ ಪ್ರವಾಸ ಬಂದ ಮೂರೂ ಜನರು ಸ್ವಯಂ ಪ್ರೇರಿತರಾಗಿ ಜಿಲ್ಲಾ ಸ್ಪತ್ರೆಯಲ್ಲಿ ಪರೀಕ್ಷೆಗೊಳಗಾಗಿದ್ದು, ಅವರಲ್ಲಿ ಕೊರೊನಾ ಸೋಂಕು ಇಲ್ಲವೆಂದು ದೃಢಪಟ್ಟಿದೆ ಎಂದು ಡಾ| ವಾಸುದೇವ ಉಪಾಧ್ಯಾಯ ತಿಳಿಸಿದರು.
ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಆರ್. ಶೇಷಪ್ಪ, ಡಿಡಿಪಿಐ ಶೇಷಶಯನ ಕಾರಿಂಜ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರತ್ನ, ಪಶುಸಂಗೋಪನೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
MUST WATCH
ಹೊಸ ಸೇರ್ಪಡೆ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ