ಅಧಿಕಾರಿಗಳೊಂದಿಗೆ ಶಾಸಕರ ಸಭೆ
Team Udayavani, Mar 28, 2020, 2:49 PM IST
ಸಕಲೇಶಪುರ: ಕೋವಿಡ್ 19 ಭೀತಿಯ ಹಿನ್ನೆಲೆಯಲ್ಲಿ ತಾಲೂಕು ಲಾಕ್ಡೌನ್ ಆಗಿದ್ದರೂ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ಕ್ಷೇತ್ರದ ಜನರಿಂದ ದೂರ ಉಳಿದಿದ್ದಾರೆ ಎಂದು ಉದಯವಾಣಿ ಪತ್ರಿಕೆಯಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನಿಂದ ಆಗಮಿಸಿ ತಕ್ಷಣ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ 19 ನಿಯಂತ್ರಣಕ್ಕೆ ನಿಯಂತ್ರಣಕ್ಕೆ ತಾಲೂಕಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಸುಮಾರು 59 ಜನ ವಿದೇಶದಿಂದ ಬಂದಿದ್ದು, ಯಾರಿಗೂ ಕೋವಿಡ್ 19 ಪಾಸಿಟಿವ್ ಕಾಣಿಸಿಕೊಳ್ಳದಿದ್ದರೂ ಅವರೆಲ್ಲರ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದರು. ಪಟ್ಟಣದ ಇಂದಿರಾ ಕ್ಯಾಂಟೀನ್ನಲ್ಲಿ ಕಡಿಮೆ ದರದಲ್ಲಿ ಬಡವರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ಹೆಚ್ಚಿನ ಜನ ಊಟ ಮಾಡಲು ಅನುಕೂಲವಾಗುವಂತೆ ವೈಯಕ್ತಿಕವಾಗಿ ಧನ ಸಹಾಯ ಮಾಡುವುದಾಗಿ ಹೇಳಿದರು.
ದಿನಸಿ, ಹಾಲು ಮತ್ತು ಅಗತ್ಯ ವಸ್ತುಗಳನ್ನು ಜನರ ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು. ಎಲ್ಲಾದಕ್ಕಿಂತ ಮುಖ್ಯವಾಗಿ ಸಾರ್ವಜನಿಕರು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ ಪರಸ್ಪರ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಜನರ ಮೇಲೆ ಪ್ರೀತಿ ಇದ್ದರೂ ಸಹ ಅನಿವಾರ್ಯವಾಗಿ ದೂರವಿರಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್, ತಾಪಂ ಇಒ ಹರೀಶ್ ಸೇರಿದಂತೆ ಇತರರು ಹಾಜರಿದ್ದರು.