ವದಂತಿಗಳಿಗೆ ಕಿವಿಗೊಡಬೇಡಿ: ಸಚಿವ ಸುರೇಶ್ ಕುಮಾರ್
Team Udayavani, Jun 25, 2020, 6:18 AM IST
SSLC ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ.
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಬಹಿರಂಗೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಮತ್ತು ಅದನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟವರ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ವದಂತಿ ಹಬ್ಬಿಸಲಾಗಿದೆ.
ಇದು ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಾಗಿದೆ. ಇಂತಹ ವದಂತಿಗಳಿಗೆ ವಿದ್ಯಾರ್ಥಿಗಳು, ಪಾಲಕ, ಪೋಷಕರು ಕಿವಿಕೊಡಬಾರದು. ಸುಳ್ಳು ಸುದ್ದಿ ಹಬ್ಬಿದ ವ್ಯಕ್ತಿಗಳನ್ನು ಬಂಧಿಸಲು ಸೈಬರ್ ಕ್ರೈಂಗೆ ದೂರು ನೀಡಿದ್ದೇವೆ ಎಂದರು.
ಪರೀಕ್ಷಾ ಕೇಂದ್ರ ಸ್ಥಳಾಂತರ
ಕಂಟೈನ್ಮೆಂಟ್ ವಲಯದಲ್ಲಿದ್ದ 11 ಜಿಲ್ಲೆಗಳ 27 ಪರೀಕ್ಷಾ ಕೇಂದ್ರ ಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಲಾಗಿದೆ. ಈ ಕೇಂದ್ರಗಳಲ್ಲಿನ 7,490 ವಿದ್ಯಾರ್ಥಿಗಳು ಸ್ಥಳಾಂತರಿಸಿದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲ್ಲಿದ್ದಾರೆ. ಕೋವಿಡ್ 19 ಸೋಂಕಿತ ಹಾಗೂ ಕ್ವಾರಂಟೈನಲ್ಲಿ ಇರುವ 19 ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸೂಚನೆಯಂತೆ ಪೂರಕ ಪರೀಕ್ಷೆಯಲ್ಲಿ ವ್ಯವಸ್ಥೆ ಮಾಡಲಿದ್ದೇವೆ ಎಂದರು.
ನಿರಾತಂಕವಾಗಿರಿ: ನಳಿನ್
ನಿರಾಂತಕವಾಗಿ ಯಶಸ್ವಿಯಾಗಿ 10ನೇ ತರಗತಿ ಪರೀಕ್ಷೆ ನಡೆಸಲು ಸರಕಾರ ಮತಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಜೀವನದ ಪ್ರಮುಖ ಘಟ್ಟವಾದ ಎಸೆಸೆಲ್ಸಿ ಪರೀಕ್ಷೆಯನ್ನು ನಿರಾತಂಕವಾಗಿ ಬರೆಯಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸರಕಾರದ ಜವಾಬ್ದಾರಿ: ಸಿದ್ದು
ಎಸೆಸೆಲ್ಸಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಿಂದ ಪರೀಕ್ಷೆ ಬರೆಯುವಂತಹ ವಾತಾವರಣವನ್ನು ನಿರ್ಮಿಸುವುದು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜವಾಬ್ದಾರಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಹಾಯವಾಣಿ
ಪರೀಕ್ಷಾ ಕೇಂದ್ರಗಳಲ್ಲಿ ಉದ್ಬವಿಸಬಹುದಾದ ಸಮಸ್ಯೆಗಳು ಹಾಗೂ ಸಂದೇಹಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಶಿಕ್ಷಣ ಇಲಾಖೆಯು ತೆರೆದಿದೆ. ದೂ: 080 23310075 ಹಾಗೂ 080 23310076ಗೆ ಕರೆ ಮಾಡಿ ಪರೀಕ್ಷೆ ಸಂಬಂಧಿಸಿದ ಸಮಸ್ಯೆ ಸಂದೇಹಗಳನ್ನು ಹೇಳಬಹುದು. ಅಲ್ಲದೆ ಪರೀಕ್ಷೆ ಕೇಂದ್ರಿತ ಸಮಸ್ಯೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಳಾ ಅವರು ನೋಡೆಲ್ ಅಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಮೊ: 9449049434 ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು.
ಶುಭ ಹಾರೈಸಿದ ಸಿಎಂ
ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು. ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿದೆ ಎಂದು ಟ್ವೀಟ್ನಲ್ಲಿ ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.