ಕೃಷಿಗೆ ಕೊಡಲಿ ಪೆಟ್ಟು: ಮಹದೇವಪ್ಪ ಆರೋಪ
Team Udayavani, Jun 27, 2020, 4:53 AM IST
ಮೈಸೂರು: ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವುದು ಆಘಾತಕಾರಿ ವಿಷಯ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಕಳವಳ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳುವವನೇ ಭೂಮಿ ಒಡೆಯನನ್ನಾಗಿ ಮಾಡುವ ಬದಲು ಉಳ್ಳವನನ್ನೇ ಭೂಮಿ ಒಡೆಯನನ್ನಾಗಿ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಕೃಷಿ ಭೂಮಿಯನ್ನು ಕೃಷಿಯೇತರ ವ್ಯಕ್ತಿಗಳು ಕೊಂಡುಕೊಳ್ಳುವಂತಿಲ್ಲ.
ಈ ಕಾಯ್ದೆ ತಿದ್ದುಪಡಿಯಿಂದ ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಲಕ್ಷಾಂತರ ಜನರು ಕೃಷಿ ಅವಲಂಬಿಸಿದ್ದಾರೆ. ಈ ಕಾಯ್ದೆ ತಿದ್ದುಪಡಿ ರೈತರಿಗೆ ಮರಣ ಶಾಸನವಾಗಲಿದೆ. ಗ್ರಾಮೀಣ ಭಾಗದ ಆರ್ಥಿಕತೆಗೆ ಕೊಡಲಿ ಪೆಟ್ಟು ಬೀಳುವ ಕಾಯ್ದೆ ಇದಾಗಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಸಲಿದೆ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ದೇಶ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ರೈತರಿಗೆ ಅನ್ಯಾಯವಾಗಿದೆ. ಜನಜೀವನ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರಗಳು ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮುಖಂಡರಾದ ಮರಿಗೌಡ, ಲಕ್ಷ್ಮಣ್, ಮೂರ್ತಿ ಇತರರಿದ್ದರು.