ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ಸೂಚನೆ
ಸೌಲಭ್ಯ ಪರೀಕ್ಷಿಸಿ-ಸರ್ಕಾರಿ ದರಪಟ್ಟಿ ಪ್ರಕಾರ ಚಿಕಿತ್ಸೆ: ಜೊಲ್ಲೆ
Team Udayavani, Aug 12, 2020, 1:23 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಶಿಕಲಾ ಜೊಲ್ಲೆ ಹೇಳಿದರು.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು ಎಂದರು.
ಖಾಸಗಿ ಆಸ್ಪತ್ರೆಯವರು ಕೋವಿಡ್ ಹಾಗೂ ಇತರೆ ಚಿಕಿತ್ಸೆ ನೀಡಲು ಮುಂದೆ ಬರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ಇಂತಹ ಅಸ್ಪತ್ರೆಗಳನ್ನು ಗುರುತಿಸಿ ಅವುಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಬೇಕು. ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿದ ದರಪಟ್ಟಿಯ ಪ್ರಕಾರ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಿದರೆ ಆಯಾ ತಾಲೂಕು ಪ್ರದೇಶಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಬಹುದು ಎಂದು ಹೇಳಿದರು. ಕೋವಿಡ್ ನ ಈ ಸಮಯ ಪರೀಕ್ಷೆಯ ಕಾಲವಾಗಿದೆ. ಆದ್ದರಿಂದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯ ಮಧ್ಯೆಯೂ ಜನರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸಬೇಕಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಅಥಣಿ ಸೇರಿದಂತೆ ಕೆಲವು ಕಡೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಮುಂದಾಗುತ್ತಿದ್ದು, ಅಂತಹವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲು ಪರಿಶೀಲಿಸಬೇಕು. ಖಾಸಗಿ ಆಸ್ಪತ್ರೆಗೆ ಅನುಮತಿ ನೀಡಿದರೆ ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಪ್ರತಿ ತಾಲೂಕಿಗೆ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ತಕ್ಷಣವೇ ಅನುಮತಿ ನೀಡಬೇಕು ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸಲಹೆ ನೀಡಿದರು.
ಕೃಷ್ಣಾ ಹಾಗೂ ದೂದಗಂಗಾ ನದಿಗಳ ಪ್ರವಾಹದ ಬಗ್ಗೆ ಪ್ರಸ್ತಾಪಿಸಿ, ಜಲಾಶಯಗಳಿಂದ ನೀರು ಬಿಡುಗಡೆ ಸಂದರ್ಭದಲ್ಲಿ ಸೂಕ್ತ ಸಮನ್ವಯ ಸಾಧಿಸಿದರೆ ಮಾತ್ರ ಪ್ರವಾಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಿದೆ. ಆದ್ದರಿಂದ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ಕೋವಿಡ್ ನಿಯಂತ್ರಣದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ, ಜಿಲ್ಲೆಯಲ್ಲಿ ಇದುವರೆಗೆ ಶೇ.40 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ತಾಲೂಕುವಾರು ಸೋಂಕಿತರಿಗೆ ಆಯಾ ತಾಲೂಕು ಆಸ್ಪತ್ರೆ ಮತ್ತು ಕೇಂದ್ರಗಳಲ್ಲಿ ಆರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರತಿದಿನ ರಾಜ್ಯಮಟ್ಟದಲ್ಲಿ ನಿಗದಿತ ಗುರಿಯಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇದಲ್ಲದೇ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ ಸರಕಾರಿ ವೈದ್ಯಕೀಯ ತಂಡ ಖಾಸಗಿ ಆಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡುತ್ತಿದೆ. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ಯಾನೆಲ್ ನಲ್ಲಿ ಇರುವ ಜಿಲ್ಲೆಯ 47 ಆಸ್ಪತ್ರೆಗಳಿಗೆ ಈಗಾಗಲೇ ನಿಗದಿಪಡಿಸಿದ ದರದಂತೆ ಬಿಲ್ ಪಾವತಿಸಲಾಗುವುದು. ಇದಲ್ಲದೇ ಚಿಕಿತ್ಸೆಗೆ ಮುಂದಾಗುವ ಇತರೆ ಖಾಸಗಿ ಆಸ್ಪತ್ರೆಗಳಿಗೂ ಮಾರ್ಗಸೂಚಿ ಅನುಸರಿಸಿ ಅನುಮತಿ ನೀಡಲಾಗುವುದು ಎಂದರು. ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಇನ್ನೆರಡು ದಿನಗಳಲ್ಲಿ ರಾಜೀವ ಗಾಂಧಿ ವಸತಿ ನಿಗಮದಿಂದ ಎರಡನೇ ಕಂತು ಕೂಡ ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಬಿಮ್ಸ್ ನಿರ್ದೇಶಕ ಡಾ| ವಿನಯ ದಾಸ್ತಿಕೊಪ್ಪ ಮಾತನಾಡಿ ಜಿಲ್ಲೆಯಲ್ಲಿ ಸದ್ಯ 371 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 96 ಜನರು ಮರಣ ಹೊಂದಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್ ಸೌಲಭ್ಯ ಇದೆ ಎಂದರು. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ನಸಿಂìಗ್ ಸಿಬ್ಬಂದಿ ಕೊರತೆ ಇರುವುದರಿಂದ ನಿರಂತರವಾಗಿ ಶಿಫ್ಟ್ ಆಧಾರದ ಮೇಲೆ ನಿರ್ವಹಿಸಲಾಗುತ್ತಿದೆ. ನಸಿಂìಗ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್.ವಿ.ಮುನ್ಯಾಳ ಮಾತನಾಡಿ ಕೋವಿಡ್-19 ಚಿಕಿತ್ಸೆಗೆ ಮುಂದಾಗುವ ಹಲವಾರು ಆಸ್ಪತ್ರೆಗಳ ವ್ಯವಸ್ಥೆಯನ್ನು ಈಗಾಗಲೇ ಪರಿಶೀಲಿಸಲಾಗಿದೆ. ನಿಯಮಾವಳಿ ಆಧರಿಸಿ ಅನುಮತಿ ನೀಡಲಾಗುವುದು ಎಂದು ಸಭೆಯಲ್ಲಿ ಶಾಸಕ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಉಪಸ್ಥಿತರಿದ್ದರು.