ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾದ ಮಾಹಿತಿಯಿಲ್ಲ: ಆರ್.ಅಶೋಕ್
Team Udayavani, Sep 16, 2020, 4:58 PM IST
ಯಾದಗಿರಿ: ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದರು.
ಯಾದಗಿರಿಯ ಅತಿಥಿಗೃಹದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾಲದಲ್ಲಿ ರಾಜಕಾರಣಿಗಳ ಮಕ್ಕಳ ನಂಟಿದೆಯೇ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಾಗೇನಾದರು ಮಾಹಿತಿ ಸಿಕ್ಕರೆ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪು ಯಾರೆ ಮಾಡಿದ್ದರು ಕ್ರಮಕೈಗೊಳ್ಳಲು ಕಾನೂನುಯಿದೆ ಎಂದರು.
ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಡ್ರಗ್ಸ್ ದಂದೆಯನ್ನು ಬಯಲಿಗೆಳೆದಿದ್ದೇವೆ ಎಂದು ಹೇಳಿದರು.
ನೆರೆ ಪರಿಹಾರಕ್ಕಾಗಿ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸದ್ಯ ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ ಎಂದರು.
ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲ್ಲ. ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.
ಕಳೆದ ಒಂದು ವಾರದಿಂದ ಕಲಬುರಗಿ, ಯಾದಗಿರಿ ಭಾಗದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು ಬೆಳೆ ಹಾನಿ ಬಗ್ಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು ಇದರ ಕುರಿತಾಗಿ ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಎಂದಿದ್ದಾರೆ.