Chef Chidambara; ಶೂಟಿಂಗ್ ಮುಗಿಸಿದ ಅನಿರುದ್ಧ್ ಚಿತ್ರ
Team Udayavani, Oct 13, 2023, 3:39 PM IST
‘ಶೆಫ್ ಚಿದಂಬರ’- ಹೀಗೊಂದು ಸಿನಿಮಾ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಪೂರ್ಣಗೊಳಿಸಿದೆ. ಅನಿರುದ್ಧ್ ನಾಯಕರಾಗಿರುವ ಈ ಚಿತ್ರವನ್ನು ಎಂ.ಆನಂದರಾಜ್ ನಿರ್ದೇಶಿಸಿದ್ದಾರೆ.
ಚಿತ್ರೀಕರಣ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮಾಧ್ಯಮ ಮುಂದೆ ಬಂದ ತಂಡ, ಚಿತ್ರದ ಕುರಿತಾಗಿ ಮಾತನಾಡಿದೆ. “ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ. ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನ ದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಇದೊಂದು ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಡಾರ್ಕ್ ಹ್ಯೂಮರ್ ಜಾನರ್ನ ಚಿತ್ರ. ಅನಿರುದ್ಧ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್ ಡೇವಿಡ್ ಅವರ ಪಾತ್ರ ಕೂಡ ವಿಭಿನ್ನವಾಗಿದೆ. ಶರತ್ ಲೋಹಿತಾಶ್ವ, ಶಿವಮಣಿ, ಮಹಾಂತೇಶ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ’ ಎಂದು ಮಾಹಿತಿ ನೀಡಿದರು. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ನಾಯಕ ಅನಿರುದ್ಧ್ ಮಾತನಾಡಿ “ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಈ ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ’ ಎಂದರು.
ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎನ್ನುವುದು ನಿಧಿ ಸುಬ್ಬಯ್ಯ ಮಾತು. ಚಿತ್ರದಲ್ಲಿ ಮಲಯಾಳಿ ಬೆಡಗಿ ರಚೆಲ್ ಡೇವಿಡ್ ಕೂಡಾ ನಾಯಕಿಯಾಗಿ ನಟಿಸಿದ್ದಾರೆ. “ಅನು ಎಂಬುದು ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಕಥೆ ಎರಡೂ ಚೆನ್ನಾಗಿದೆ’ ಎಂದರು ರೆಚೆಲ್ ಡೇವಿಡ್.
ಚಿತ್ರಕ್ಕೆ ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶನ, ಆಶಿಕ್ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.
ರವಿಪ್ರಕಾಶ್ ರೈ