ಕರಿಕೋಟು ತೊಟ್ಟ ರಾಧಿಕಾ ಚೇತನ್
Team Udayavani, Dec 17, 2018, 11:34 AM IST
ರಂಗಿತರಂಗದ ಬೆಡಗಿ ರಾಧಿಕಾ ಚೇತನ್ ಶೀಘ್ರದಲ್ಲಿಯೇ ಲಾಯರ್ ಗಿರಿ ಶುರು ಮಾಡಲಿದ್ದಾರೆ. ಹೌದು, ರಾಧಿಕಾ ಚೇತನ್ ಮುಂಬರುವ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದ ಪಾತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ.
ಈ ಹಿಂದೆ “ಬದ್ಮಾಶ್’ ಚಿತ್ರವನ್ನು ನಿರ್ದೇಶಿಸಿದ್ದ ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಇನ್ನೂ ಹೆಸರಿಡದ ಸೈಕಾಲಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಾಧಿಕಾ ಚೇತನ್, ರಮೇಶ್ ಅರವಿಂದ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರದ ಶೀರ್ಷಿಕೆ ಇನ್ನಷ್ಟೇ ನಿರ್ಧಾರವಾಗಬೇಕಿದೆ.
ಜನವರಿ ಮೊದಲ ವಾರದಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ಅನೂಪ್ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಗುರುಪ್ರಸಾದ್ ಎಂ.ಜಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರದಲ್ಲಿ ಆರೋಹಿ ನಾರಾಯಣ್ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.