ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ ಸಮಾರಂಭ
Team Udayavani, Jan 27, 2020, 7:00 AM IST
ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 43ನೇ ವಾರ್ಷಿಕೋತ್ಸವ ಮತ್ತು 19ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ನಡೆಯಿತು.
ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ನಟಿ ಉಮಾಶ್ರೀ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್ ಜೈರಾಜ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಪಿ.ಯು, ಹಿರಿಯ ನಿರ್ದೇಶಕ ಪ್ರೊ. ಬರಗೂರು ರಾಮಚಂದ್ರಪ್ಪ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಎಸ್. ಉಮೇಶ್, ಪಿ. ಶೇಷಾದ್ರಿ, ಹಿರಿಯ ನಟ ಶ್ರೀನಿವಾಸ ಪ್ರಭು, ರಮೇಶ್ ಭಟ್, ಹಿರಿಯ ನಟಿ ಪ್ರಮೀಳಾ ಜೋಷಾಯ್ ಸೇರಿದಂತೆ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಸಾಧಕರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ದಿ. ಡಿ.ವಿ. ಸುಧೀಂದ್ರ ಅವರ ವೃತ್ತಿಜೀವನ ಕುರಿತಾದ “ಸುಧೀಂದ್ರ ಸಿನಿ ಪಯಣ’ ಎಂಬ ಸಾಕ್ಷ್ಯಚಿತ್ರವನ್ನು ಲೋಕಾರ್ಪಣೆ ಮಾಡಲಾಯಿತು. ಡಿ.ವಿ.ಸುಧೀಂದ್ರ ಅವರು ಆರಂಭಿಸಿದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಪ್ರಸ್ತುತ ಸುಧೀಂದ್ರ ವೆಂಕಟೇಶ್, ಸುನೀಲ್ ಹಾಗೂ ವಾಸುದೇವ್ ಮುನ್ನಡೆಸಿಕೊಂಡು ಬರುತ್ತಿದ್ದಾರೆ.