ಮಹಾಲಿಂಗಪುರ: ತಾಲೂಕು ಹೋರಾಟ ನಿಯೋಗದಿಂದ ಸಿಎಂ, ಸಚಿವರುಗಳ ಭೇಟಿ
Team Udayavani, Sep 15, 2022, 10:03 PM IST
ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ ತಾಲೂಕು ಹೋರಾಟ ನಿಯೋಗವು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಶೀಘ್ರದಲ್ಲೇ ಮಹಾಲಿಂಗಪುರವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಣೆ ಮಾಡಲಾಗುವುದು. ನಂತರ ಸ್ವಲ್ಪ ಸಮಯ ತೆಗೆದುಕೊಂಡು ಮಹಾಲಿಂಗಪುರವನ್ನು ತಾಲೂಕು ಕೇಂದ್ರ ಘೋಷಣೆ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆಂದು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ, ಕಾರ್ಯಾಧ್ಯಕ್ಷ ಧರೆಪ್ಪ ಸಾಂಗ್ಲೀಕರ ಹೇಳಿದರು.
ಮನವಿ ಸಲ್ಲಿಸುವ ವೇಳೆ ಶಾಸಕ ಸಿದ್ದು ಸವದಿ,ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಬಸವರಾಜ ಹಿಟ್ಟಿನಮಠ ಹಾಗೂ ನಿಯೋಗದ ಸದಸ್ಯರು ಇದ್ದರು. ಸಚಿವರಾದ ಆರ್.ಅಶೋಕ, ಸಿ.ಸಿ.ಪಾಟೀಲ್ , ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಮನವಿ ಸಲ್ಲಿಸಿದ ನಿಯೋಗದ ಸದಸ್ಯರು, ತಾಲೂಕು ಕೇಂದ್ರಕ್ಕೆ ಎಲ್ಲ ಅರ್ಹತೆ ಹೊಂದಿರುವ ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಲು ಸರ್ಕಾರದ ಒತ್ತಡ ಹಾಕಬೇಕು ಆಗ್ರಹಿಸಿದರು.
ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಸೇರಿದಂತೆ ಸಮಿತಿ ಸದಸ್ಯರು, ಸರ್ವ ಪಕ್ಷಗಳ ಕಾರ್ಯಕರ್ತರು, ವಿವಿಧ ಸಂಘಟನೆ ಮುಖಂಡರು ನಿಯೋಗದಲ್ಲಿದ್ದರು.