Belagavi ಅಧಿವೇಶನದಲ್ಲಿಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ ಆದ್ಯತೆ: ಹೊರಟ್ಟಿ
Team Udayavani, Nov 3, 2023, 6:21 PM IST
ಮುಧೋಳ: ಬೆಳಗಾವಿಯಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆದ್ಯತೆ ಕೊಡಲಾಗುವುದು. ಸತತ ಎರಡು ದಿನ ವಿಧಾನ ಪರಿಷತ್ತಿನಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಮಾಜಿ ಸಚಿವ ಮುರುಗೇಶ ನಿರಾಣಿ ನಿವಾಸಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಜತೆ ಸಭೆ ನಡೆಸಿ ಅಧಿವೇಶನದ ಕಲಾಪದ ಬಗ್ಗೆ ಚರ್ಚಿಸಲಾಗುವುದು.
ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಅವಕಾಶ ಕೊಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು. ಶಾಸಕರು ಸಹ ಇದಕ್ಕೆ ಒಲವು ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಅಧಿವೇಶನ ವೇಳೆ ಚಳವಳಿ, ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಯುತ್ತಿವೆ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗಳು ಬೇಕು. ಆದರೆ, ಕಲಾಪಕ್ಕೆ ಅಡ್ಡಿಯಾಗದಂತೆ ನಡೆಯಬೇಕು ಎಂದರು.