ಮಾಧ್ಯಮಗಳ ವಿರುದ್ಧ ಪುಟ್ಟರಂಗಶೆಟ್ಟಿ ಕೋರ್ಟ್ಗೆ ಅರ್ಜಿ
Team Udayavani, Jan 11, 2019, 1:20 AM IST
ಬೆಂಗಳೂರು: ತಮ್ಮ ಆಪ್ತ ಸಹಾಯಕ ಮೋಹನ್ ಬಳಿ 25.76 ಲಕ್ಷ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ತಮ್ಮ ವಿರುದ್ಧ ವರದಿ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪುಟ್ಟರಂಗಶೆಟ್ಟಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಗುರುವಾರ ಸಂಜೆ ಸಚಿವರ ಪರ ವಕೀಲರು ಹೈಕೋರ್ಟ್ನ ನ್ಯಾ. ಕೆ. ಸೋಮಶೇಖರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರ ಮಂಡಿಸಿ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಆದರೆ, ವಕೀಲರ ಮನವಿಯನ್ನು ತಳ್ಳಿ ಹಾಕಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಜ.14ಕ್ಕೆ ನಿಗದಿಪಡಿಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಸಚಿವ ಪುಟ್ಟರಂಗಶೆಟ್ಟಿ, ಸಿಟಿ ಸಿವಿಲ್ ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಇದನ್ನು ತಿರಸ್ಕರಿಸಿದ್ದ ಅಧೀನ ನ್ಯಾಯಾಲಯ ಮಾಧುಮಗಳ ಮೇಲೆ ಏಕಪಕ್ಷೀಯ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿ, ಅರ್ಜಿ ಕುರಿತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ. ಅದಕ್ಕಾಗಿ ಸಚಿವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.