ತನಿಖಾಧಿಕಾರಿ ಬದಲಿಸುವಂತೆ ಹೈಕೋರ್ಟ್ಗೆ ಅರ್ಜಿ
Team Udayavani, Nov 10, 2018, 6:00 AM IST
ಬೆಂಗಳೂರು: ವಂಚನೆ ಆರೋಪದಲ್ಲಿ ಆ್ಯಂಬಿಡೆಂಟ್ ಕಂಪೆನಿಯ ನಿರ್ದೇಶಕರ ವಿರುದ್ಧ ದಾಖಲಿಸಿರುವ ಎಫ್ ಐಆರ್ ರದ್ದುಪಡಿಸಲು ಹಾಗೂ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಾಯಿಸುವಂತೆ ಕೋರಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರ ಜೀವನಹಳ್ಳಿ ಪೊಲೀಸರು ಆ್ಯಂಬಿಡೆಂಟ್ ಕಂಪೆನಿಯ ನಿರ್ದೇಶಕರ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕ್ರಿಮಿನಲ್ ಅರ್ಜಿ ಹಾಗೂ ಪ್ರಕರಣದ ತನಿಖಾಧಿಕಾರಿಗಳದ ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಎಸ್.ಗಿರೀಶ್ ಮತ್ತು ಎಸಿಪಿ ಡಾ.ಎಚ್.ಎನ್. ವೆಂಕಟೇಶ್ ಪ್ರಸನ್ನ ಅವರನ್ನು ಬದಲಿಸುವಂತೆ ಕೋರಿ ಜನಾರ್ದನ ರೆಡ್ಡಿಯವರು ತರಕಾರು ಅರ್ಜಿ ಸಲ್ಲಿಸಿದ್ದಾರೆ.
ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಸಿಸಿಬಿಯ ಡಿಸಿಪಿ ಗಿರೀಶ್ ಹಾಗೂ ಎಸಿಪಿ ಡಾ.ಎಚ್.ಎನ್.ವೆಂಕಟೇಶ್ ಮತ್ತು ದೂರುದಾರ ಸಫìರಾಜ್ ಆಲಂ ತಬ್ರೇಜ್ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ರೆಡ್ಡಿ ಹಾಗೂ ಅವರ ಆಪ್ತ ಅಲಿ ಖಾನ್ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದು, ಅವು ಶೀಘ್ರ ವಿಚಾರಣೆಗೆ ಬರಲಿದೆ.