ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿದರೆ ಕ್ರಮ
Team Udayavani, Jun 3, 2018, 6:45 AM IST
ಬೆಂಗಳೂರು: ಕಳಪೆ ಬಿತ್ತನೆ ಬೀಜ ಹಾಗೂ ರಾಸಾಯನಿಕ ಗೊಬ್ಬರ ಪೂರೈಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾ ಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಶನಿವಾರ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜ್ಯ ದಲ್ಲಿ ಮುಂಗಾರು ಆರಂಭವಾಗಿರುವುದರಿಂದ ರೈತರಿಗೆ ಅಗತ್ಯವಾದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ, ಪರಿಕರಗಳನ್ನು ಪೂರೈಕೆ ಮಾಡಬೇಕು. ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲೂ ಅಡ್ಡಿಯಾಗಬಾರದು. ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸುವಲ್ಲಿ ವಿಫಲರಾಗುವ ಅಧಿಕಾರಿಗಳಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಬಾರಿ ಮಳೆಗಾಲಕ್ಕೆ ಮುನ್ನವೇ ಶೇ.51ರಷ್ಟು ಹೆಚ್ಚು ಮಳೆಯಾಗಿದ್ದು,ಮಳೆಗಾಲ ಮೂರು ದಿನ ಮುಂಚಿತವಾಗಿ
ಆರಂಭವಾಗಿದೆ. ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರೈತರು ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದರು. ಇಸ್ರೇಲ್ಗೆ ಪ್ರವಾಸ ಕೈಗೊಂಡಿದ್ದ
ಸಂದರ್ಭದಲ್ಲಿ ಅಲ್ಲಿನ ಕೃಷಿ ಪದಟಛಿತಿ ಬಗ್ಗೆ ಅಧ್ಯಯನ ಮಾಡಿದ್ದೇನೆ. ರಾಜ್ಯದಲ್ಲಿ ಅದೇ ಮಾದರಿ ಆಧುನಿಕ ಕೃಷಿ ಪದ್ಧತಿ ಅಳವಡಿಸಲಾಗುವುದು. ಮೊದಲಿಗೆ ಪ್ರಯೋಗಿಕವಾಗಿ ಮಂಡ್ಯದಲ್ಲಿ 900 ಎಕರೆ ಪ್ರದೇಶದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು.ಇದಕ್ಕಾಗಿ ಇಸ್ರೇಲ್ನಿಂದ ಪರಿಣಿತರನ್ನೂ ಕರೆಸಲಾಗುವುದು ಎಂದು ಹೇಳಿದರು.
ಬಾಕಿ ಪಾವತಿ: ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಸುಮಾರು 1500ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದಾರೆ.
ಕಾರ್ಖಾನೆ ಮಾಲೀಕರು ತಕ್ಷಣ ರೈತರಿಗೆ ಹಣ ಪಾವತಿಗೆ ಮುಂದಾಗಬೇಕು. ಕೇಂದ್ರ ಸರ್ಕಾರವೂ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ರೈತರಿಂದ ಹಾಲು ಖರೀದಿ ದರ ಕಡಿಮೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಹಾಲು ಹೆಚ್ಚು ಸಂಗ್ರಹವಾಗುತ್ತಿದೆ. 82ಲಕ್ಷ ಲೀಟರ್ ಹಾಲು ನಿತ್ಯ ಸಂಗ್ರಹವಾಗುತ್ತಿದ್ದು 36ಲಕ್ಷ ಲೀಟರ್ವರೆಗೂ ಮಾರಾಟವಾಗುತ್ತಿದೆ. ಹೀಗಾಗಿ, ಜಿಲ್ಲಾ ಹಾಲು ಒಕ್ಕೂಟಗಳು ನಷ್ಟ ಅನುಭವಿಸುತ್ತಿವೆ.ಆದರೆ, ರೈತರಿಂದ ಹಾಲು ಖರೀದಿ ದರ ಇಳಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಜಿಲ್ಲಾ ಹಾಲು ಒಕ್ಕೂಟ ಹಾಗೂ ಕೆಎಂಎಫ್ ಆಡಳಿತದಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸುವುದಿಲ್ಲ ಎಂದರು.
ಎಚ್.ಡಿ.ರೇವಣ್ಣ ಎಂಟ್ರಿ: ವಿಧಾನಸೌಧದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಎಚ್.ಡಿ.ರೇವಣ್ಣ ಸಹ ಆಗಮಿಸಿದರು.ಹಾಸನದಲ್ಲಿ ಕಳಪೆ ಬಿತ್ತನೆ ಬೀಜ ಪೂರೈಕೆ ಸಂಬಂಧ ಕೃಷಿ ಮತ್ತು ತೊಟಗಾರಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಾಸನ ಜಿಲ್ಲೆಯಲ್ಲಿ ಆಲೂಗಡ್ಡೆ ವಿಚಾರದಲ್ಲಿ ಬಿತ್ತನೆ ಬೀಜದ ಗಡ್ಡೆಗೆ ಬದಲಾಗಿ ಚಿಪ್ಸ್ ತಯಾರಿಸುವ ಆಲೂಗಡ್ಡೆ ವಿತರಿಸಲಾಗಿದೆ ಎಂದು ದೂರಿದರು. ಹಾಸನ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ ಸಭೆಯೂ ಇದೇ ಸಂದರ್ಭದಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ