Crime: ಸ್ನೇಹಿತರಿಂದಲೇ ಯುವಕನ ಕೊಲೆ; ಆರೋಪಿಗಳಿಗಾಗಿ ಶೋಧ
Team Udayavani, Jan 2, 2024, 2:13 PM IST
ಬೆಂಗಳೂರು: ಹೊಸ ವರ್ಷದ ದಿನವೇ ನಗರದಲ್ಲಿ ರಕ್ತದೋಕುಳಿ ಹರಿದಿದೆ. ಸ್ನೇಹಿತರೇ ಯುವಕನನ್ನು ಕೊಲೆಗೈದು ಪರಾರಿ ಯಾಗಿರುವ ಘಟನೆ ಹನುಮಂತ ನಗರ ಠಾಣೆ ವ್ಯಾಪ್ತಿಯ ಶ್ರೀನಿವಾಸನಗರ ಬಸ್ ನಿಲ್ದಾಣದ ಬಳಿ ನಡೆದಿದೆ.
ಶ್ರೀನಿವಾಸನಗರ ನಿವಾಸಿ ವಿಜಯ್ ಕುಮಾರ್ (21) ಕೊಲೆಯಾದವ. ಕೃತ್ಯ ಎಸಗಿದ ಆತನ ಸ್ನೇಹಿತರಿ ಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ನಗರದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದ ವಿಜಯ್ ಕುಮಾರ್, ಡಿ.31ರಂದ ರಾತ್ರಿ ಹೊಸ ವರ್ಷದ ಆಚರಣೆಗೆ ಸ್ನೇಹಿತರ ಜತೆ ಹೋಗಿದ್ದಾನೆ. ಬಳಿಕ ಎಲ್ಲರೂ ಒಟ್ಟಿಗೆ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಆರೋಪಿಗಳು ಹಾಗೂ ವಿಜಯ್ ನಡುವೆ ಗಲಾಟೆ ನಡೆದಿದ್ದು, ಅದು ವಿಕೋಪಕ್ಕೆ ಹೋಗಿದೆ. ಬಳಿಕ ಶ್ರೀನಿವಾಸನಗರ ಬಸ್ ನಿಲ್ದಾಣದ ಬಳಿ ಇಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಸ್ ನಿಲ್ದಾಣದ ಮುಂಭಾಗ ಮೃತದೇಹ ಎಸೆದು ಪರಾರಿಯಾಗಿದ್ದಾರೆ.
ತೀವ್ರ ರಕ್ತಸ್ರಾವದಿಂದ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ, ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಈ ಸಂಬಂಧ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.