ಎಂಎಲ್ಸಿ ಸ್ಥಾನಕ್ಕೆ ಬೈರತಿ ಸುರೇಶ್ ರಾಜೀನಾಮೆ
Team Udayavani, Apr 10, 2018, 6:40 AM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಕಾಂಗ್ರೆಸ್ನ ಬೈರತಿ ಸುರೇಶ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾನುವಾರ ರಾತ್ರಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ನಿವಾಸಕ್ಕೆ ತೆರಳಿ ಬೈರತಿ ಸುರೇಶ್ ಮೇಲ್ಮನೆ ಸದಸ್ಯ ಸ್ಥಾನಕ್ಕೆ ತಮಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಭಾಪತಿಗಳು ಈ ರಾಜೀನಾಮೆ ಅಂಗೀಕರಿಸಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬೈರತಿ ಸುರೇಶ್ ಅವರ ಸದಸ್ಯತ್ವ ಅವಧಿ ಈ ವರ್ಷದ ಜೂನ್ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಅದಕ್ಕೆ ಎರಡು ತಿಂಗಳು ಮುನ್ನವೇ ಅವರು ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಹೆಬ್ಟಾಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಬೈರತಿ ಸುರೇಶ್ 2016ರಲ್ಲೇ ಈ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆ ವೇಳೆ ಕಾಂಗ್ರೆಸ್ ಟಿಕೆಟ್ ಕೇಳಿದ್ದರು. ಆದರೆ, ಕೊನೇ ಕ್ಷಣದಲ್ಲಿ ಟಿಕೆಟ್ ಅಬ್ದುಲ್ ರೆಹಮಾನ್ ಶರೀಫ್ ಪಾಲಾಗಿತ್ತು. ಚುನಾವಣೆಯಲ್ಲಿ ಶರೀಫ್ ಸೋಲನುಭವಿಸಿದ್ದರು. ಈ ಬಾರಿ ಬೈರತಿ ಸುರೇಶ್ಗೆ ಹೆಬ್ಟಾಳ ಕ್ಷೇತ್ರದ ಟಿಕೆಟ್ ಬಹುತೇಕ ಖಚಿತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅವರ ಬೆನ್ನ ಹಿಂದೆ ನಿಂತಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.