ಜಮೀರ್ ವಿರುದ್ಧ ಆಯೋಗಕ್ಕೆ ದೂರು
Team Udayavani, Aug 4, 2019, 3:05 AM IST
ಬೆಂಗಳೂರು: ಚುನಾವಣಾ ಆಯೋಗಕ್ಕೆ ನೀಡಿರುವ ಆಸ್ತಿ ವಿವರದಲ್ಲಿ ಜಮೀರ್ ಅಹಮದ್ ಖಾನ್ ತಪ್ಪು ಮಾಹಿತಿ ನೀಡಿದ್ದಾರೆ, ಹಾಗಾಗಿ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಜಮೀರ್ ಅಹಮದ್ ಖಾನ್ ,ಮಾಜಿ ಸಚಿವ ಚೆಲುವರಾಯಸ್ವಾಮಿ ಅವರಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಮಾಹಿತಿ ನೀಡಿರುತ್ತಾರೆ.
ಆದರೆ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಚೆಲುವರಾಯಸ್ವಾಮಿ ತನ್ನ ಆಸ್ತಿ ವಿವರದಲ್ಲಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. ಹಾಗಾಗಿ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಜಮೀರ್ ಅಹಮದ್ ಖಾನ್ ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ಎನ್.ಆರ್.ರಮೇಶ್ ತಿಳಿಸಿದರು.