ದಕ್ಷಿಣ ಕನ್ನಡ ಜಿ.ಪಂ. ಸಿಇಒ ಆದೇಶಕ್ಕೆ ಮಧ್ಯಂತರ
Team Udayavani, Jan 19, 2018, 6:35 AM IST
ಬೆಂಗಳೂರು: ಭುವನಜ್ಯೋತಿ ಎಜುಕೇಷನ್ ಟ್ರಸ್ಟ್ಗೆ ಆಸ್ತಿ ತೆರಿಗೆ ಪಾವತಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ನಿರಾಕರಿಸಿದ್ದ ದಕ್ಷಿಣ ಕನ್ನಡ ಜಿ.ಪಂ ಸಿಇಒ ಕ್ರಮ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಭುವನಜ್ಯೋತಿ ಚಾರಿಟಬಲ್ ಟ್ರಸ್ಟ್ನ ಭುವನಜ್ಯೋತಿ ಎಜುಕೇಷನ್ ಟ್ರಸ್ಟ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಪೀಠ ತಡೆಯಾಜ್ಞೆ ನೀಡಿತು.
ಜೊತೆಗೆ ಯಾವ ಆಧಾರದಲ್ಲಿ ಅರ್ಜಿದಾರರಿಗೆ ತೆರಿಗೆ ವಿನಾಯ್ತಿ ನಿರಾಕರಿಸಲಾಗಿದೆ, ಯಾವ ನಿಯಮದಡಿ ತೆರಿಗೆ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸುವಂತೆ ಜಿ.ಪಂ. ಸಿಇಒಗೆ ನಿರ್ದೇಶನ ನೀಡಿರುವ ನ್ಯಾಯಪೀಠ, ಪ್ರಕರಣದ ಪ್ರತಿವಾದಿಗಳಾದ ಶಿರ್ತಾಡಿ ಗ್ರಾಮ ಪಂಚಾಯಿತಿ ಪಿಡಿಒ, ದಕ್ಷಿಣ ಕನ್ನಡ ಜಿ.ಪಂ ಸಿಇಒ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
ಪ್ರಮಾಣಪತ್ರದ ಸಲ್ಲಿಸಲು ವಿಫಲವಾದಲ್ಲಿ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಠೇವಣ ರೂಪದಲ್ಲಿ 50 ಸಾವಿರ ರೂ. ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆ ಠೇವಣಿ ಮೊತ್ತವನ್ನು ಅರ್ಜಿದಾರ ಸಂಸ್ಥೆಗೆ ಪರಿಹಾರ ರೂಪದಲ್ಲಿ ಏಕೆ ಕೊಡಬಾರದು ಎಂಬುದರ ಬಗ್ಗೆ ವಿವರಣೆ ನೀಡಬೇಕು ಎಂದು ಸಿಇಒಗೆ ತಾಕೀತು ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.