ಮತ್ತೆ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ನಿರ್ಧಾರ
Team Udayavani, Dec 2, 2020, 9:46 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಮತ್ತೆ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಗರದಲ್ಲಿ ಸಂಚಾರ ಶಿಸ್ತು ತರುವ ನಿಟ್ಟಿನಲ್ಲಿ ನೂತನ ವಾಹನ ನಿಲುಗಡೆ ನೀತಿ ಜಾರಿಗೊಳಿಸಲು ತೀರ್ಮಾನಿಸಲಾಗಿದ್ದು ಕರಡು ಸಿದ್ಧಪಡಿಸಲು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಪಾರ್ಕಿಂಗ್ ನೀತಿ-2.0 ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ನಗರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಸಂಚಾರ ಶಿಸ್ತು ತರಲು ಪಾರ್ಕಿಂಗ್ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಪಾರ್ಕಿಂಗ್ ಶುಲ್ಕವನ್ನು ಯಾವ ರೀತಿ ಸಂಗ್ರಹಿಸಬೇಕು ಹಾಗೂ ಮಾನದಂಡಗಳು ಯಾವ ರೀತಿ ಇರಬೇಕು ಎಂಬ ಬಗ್ಗೆ ಮಾರ್ಗಸೂಚಿ ತಯಾರಿಸಿ ಕರಡು ನೀತಿ ಸಿದ್ಧಪಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ 80 ರಿಂದ 85 ಸ್ಥಳಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ನಗರದ ಎಲ್ಲಾಕಡೆ ಶುಲ್ಕ ಸಂಗ್ರಹಕೇಂದ್ರಗಳನ್ನು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದರು.
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಮತ್ತು ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಪಾರ್ಕಿಂಗ್ ಶುಲ್ಕ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು. ಮುಖ್ಯ ಕಾರ್ಯದರ್ಶಿಗಳು ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿಗೆ ತರುವ ಬಗ್ಗೆ ಅಂತಿಮ ನಿರ್ಧಾರಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ : ಮಂಗಳೂರು ಬೋಟ್ ದುರಂತ: ನಾಲ್ವರು ಪತ್ತೆಯಾಗುವವರೆಗೂ ಮೀನುಗಾರಿಕಾ ಬಂದರು ಬಂದ್ ಮಾಡಿ ಮುಷ್ಕರ
ನಗರಾಭಿವೃದ್ಧಿ ಸಚಿವ ಬಸವರಾಜ್, ಮುಖ್ಯಮಂತ್ರಿಯವರ ಸಲಹೆಗಾರರಾದ ಎಂ. ಲಕ್ಷ್ಮೀ ನಾರಾಯಣ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯಕ್ತರಾದ ವಿ. ಮಂಜುಳ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ದಟ್ಟಣೆ ನಿಯಂತ್ರಣಕ್ಕೆ ತಂತ್ರಜ್ಞಾನ ಆಧಾರಿತ ಪಾರ್ಕಿಂಗ್ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ 2.0 ರೂಪಿಸಲಾಗುತ್ತಿದೆ. ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು,ನವೀಕರಿಸಿದ ನೀತಿಯನ್ನು ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.– ಎಸ್.ಆರ್.ವಿಶ್ವನಾಥ್, ಬಿಡಿಎ ಅಧ್ಯಕ