ಉ.ಕ.ಅನ್ಯಾಯ ಸರಿಪಡಿಸುತ್ತೇವೆ
Team Udayavani, Jul 27, 2018, 6:55 AM IST
ಬೆಂಗಳೂರು: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವ್ಯತ್ಯಾಸ
ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೆಡಿಎಸ್ ದಕ್ಷಿಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಿರುವುದರಿಂದ ಸಮ್ಮಿಶ್ರ ಸರ್ಕಾರದಲ್ಲಿ ಆ ಭಾಗದ ಶಾಸಕರಿಗೆ ಹೆಚ್ಚಿನ ಅವಕಾಶ ದೊರೆತಿದೆ. ಕಾಂಗ್ರೆಸ್ನಿಂದ ಉ.ಕ. ಭಾಗದಿಂದಲೂ ಶಾಸಕರು ಆಯ್ಕೆಯಾಗಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಿ ಆಗಿರುವ ಅನ್ಯಾಯ ಸರಿಪಡಿಸುತ್ತೇವೆ’ ಎಂದರು.
ಪ್ರತ್ಯೇಕ ಕರ್ನಾಟಕ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಅವರು, “ಜನರು ಮತ ಹಾಕುವುದಕ್ಕೂ ಸರ್ಕಾರ ಅಭಿವೃದ್ಧಿ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಅಧಿಕಾರಕ್ಕೆ ಬಂದ ಸರ್ಕಾರ
ಯಾವುದೇ ಪ್ರದೇಶ ಹಾಗೂ ಜನರನ್ನು ತಿರಸ್ಕಾರ ಮಾಡಬಾರದು’ ಎಂದು ಪರೋಕ್ಷವಾಗಿ ಮುಖ್ಯಮಂತ್ರಿಗೆ ಕಿವಿ ಮಾತು ಹೇಳಿದರು.
ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ದೊರೆತಿಲ್ಲ. ಹಾಗಂತ ಕರಾವಳಿ ಅಭಿವೃದ್ಧಿ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ ಎಂದರು.ಉ.ಕ.ಪ್ರತ್ಯೇಕ ರಾಜ್ಯದ ಕೂಗು ಆಗಾಗ ಕೇಳಿ ಬರುತ್ತಿದ್ದು, ಅದು ಸರಿಯಲ್ಲ. ಕೆಲ ರಾಜಕಾರಣಿಗಳಿಂದ ಜನರನ್ನು ಎತ್ತಿ ಕಟ್ಟುವ ಕೆಲಸ ಆಗುತ್ತಿದೆ.
– ಬಸವರಾಜ ಹೊರಟ್ಟಿ, ವಿ.ಪ. ಸಭಾಪತಿ