ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ
Team Udayavani, Oct 5, 2018, 6:20 AM IST
ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ.
ಸರ್ವೋತ್ಛ ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಮುಂದಾದ ರಾಜ್ಯ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಶ್ರೀರಾಮಚಂದ್ರಾಪುರ ಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಹಾಗೂ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೆ.7ರಂದು ಸುಪ್ರೀಂಕೋರ್ಟ್ ನೀಡಿದ ಆದೇಶವೇ ಮುಂದಿನ ವಿಚಾರಣೆವರೆಗೆ ಮುಂದುವರಿಯಬೇಕಿದೆ ಎಂದು ಸ್ಪಷ್ಟವಾಗಿ ಹೇಳಿದೆ.
ಪ್ರಕರಣದ ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಸೆ.7ರ ಆದೇಶದಲ್ಲಿ ಸುಪ್ರೀಂಕೋರ್ಟ್ ಹೇಳಿತ್ತು. ಜಿಲ್ಲಾಧಿಕಾರಿಗಳ ನೇತೃತ್ವದ ಮೇಲ್ವಿಚಾರಣಾ ಸಮಿತಿ ರಚನೆಯನ್ನು ತಡೆ ಹಿಡಿಯವಂತೆ ಸಹ ಆದೇಶದಲ್ಲಿ ನಿರ್ದೇಶನ ನೀಡಲಾಗಿತ್ತು. ಆದರೆ, ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ಸುಪರ್ದಿಗೆ ತೆಗೆದುಕೊಳ್ಳುವ ಸಂಬಂಧ ಸೆ.18ರಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೆ ಉಭಯ ಕಕ್ಷಿದಾರರು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬುದೇ ಸೆ.7ರ ಆದೇಶದ ಸಾರಾಂಶ ಆಗಿತ್ತು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೇ ಸೆ.7ರ ಆದೇಶದಂತೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ವಹಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿ ಸೆ. 18ರಂದು ಹೊರಡಿಸಲಾಗಿದ್ದ ಆದೇಶ ಸರ್ಕಾರ ವಾಪಸ್ ಪಡೆಯಬೇಕಿದೆ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಮಠದ ಆಡಳಿತ ವಿಷಯಕ್ಕೆ ಸಂಬಂಧಿಸಿದಂತೆ ಹಿಂದಿದ್ದ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೆ.7ರಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಅದರಂತೆ, ಗೋಕರ್ಣ ದೇವಸ್ಥಾನದ ಆಡಳಿತ ವ್ಯವಸ್ಥೆಯು ಶ್ರೀರಾಮಚಂದ್ರಪುರ ಮಠದ ಸುಪರ್ದಿಯಲ್ಲಿ ಮುಂದುವರಿಯಬೇಕಿತ್ತು. ಆದರೆ, ಸುಪ್ರೀಂಕೋರ್ಟ್ ಆದೇಶ ತಿರುಚಿ ಸೆ.18ರಂದು ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ದೇವಸ್ಥಾನವನ್ನು ಸ್ವಾಧೀನಕ್ಕೆ ಪಡೆದುಕೊಳ್ಳಲು ಮುಂದಾಗಿತ್ತು. ಸರ್ಕಾರದ ಈ ಕ್ರಮ ನ್ಯಾಯಸಮ್ಮತವಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಸರ್ಕಾರದ ಆದೇಶವನ್ನು ಹಿಂಪಡೆದಿದೆ. ಅದರಂತೆ, ದೇವಸ್ಥಾನದ ಆಡಳಿತ ವ್ಯವಸ್ಥೆ ಮಠದ ನಿರ್ವಹಣೆಯಲ್ಲಿ ಬರಲಿದೆ. ಅರ್ಜಿ ಇತ್ಯರ್ಥಗೊಳ್ಳುವರೆಗೆ ದೇವಾಲಯದ ಆಡಳಿತ ನಿರ್ವಹಣೆ ಮಠದ ಸುಪರ್ದಿಯಲ್ಲೇ ಇರಬೇಕಾಗುತ್ತದೆ’.
– ಎಂ. ಅರುಣ್ ಶ್ಯಾಮ್, ಮಠದ ಪರ ವಕೀಲರು.
ಗೋಕರ್ಣ ದೇವಸ್ಥಾನದ ಆಡಳಿತ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.7ರಂದು ನೀಡಿದ ಯಥಾಸ್ಥಿತಿ ಆದೇಶ ಮುಂದುವರಿಯಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದ ಮೇಲ್ವಿಚಾರಣಾ ಸಮಿತಿ ರಚಿಸುವ ಅವಶ್ಯಕತೆ ಸದ್ಯ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆಯಷ್ಟೇ, ದೇವಸ್ಥಾನವನ್ನು ಮಠಕ್ಕೆ ಒಪ್ಪಿಸಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ ಪ್ರಕಟಗೊಂಡಿದೆ. ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಹ ಸುಪ್ರೀಕೋರ್ಟ್ ಮುಕ್ತಾಯಗೊಳಿಸಿದೆ’.
– ಎಸ್.ಎಸ್. ನಾಗಾನಂದ, ದೇವಸ್ಥಾನದ ಪರ ವಕೀಲರು.