ವಿದ್ಯುತ್ ಉತ್ಪಾದನೆ ಹೆಚ್ಚಿಳಕ್ಕೆ 39 ಸಾವಿರ ಕೋಟಿ ರೂ. ಒಪ್ಪಂದ
Team Udayavani, Feb 4, 2017, 3:45 AM IST
ಬೆಂಗಳೂರು: ರಾಜ್ಯ ವಿದ್ಯುತ್ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆಗಳ ಅನುಷ್ಟಾನಕ್ಕೆ ರಾಷ್ಟ್ರೀಯ ಗ್ರಾಮೀಣ ವಿದ್ಯುದೀಕರಣ ನಿಗಮದ ಜತೆ ರಾಜ್ಯ ಸರ್ಕಾರ 39 ಸಾವಿರ ಕೋಟಿ ರೂ.ಗಳ ಬೃಹತ್ ಒಪ್ಪಂದ ಮಾಡಿಕೊಂಡಿದೆ.
ರಾಜ್ಯದಲ್ಲಿ ಹಾಲಿ ಚಾಲ್ತಿಯಲ್ಲಿರುವ ವಿದ್ಯುತ್ ಉತ್ಪಾದನೆ ಯೋಜನೆಗಳ ಜತೆಗೆ ಶಿವನ ಸಮುದ್ರ, ಶರಾವತಿ ಪಂಪ್ ಸ್ಟೋರೇಜ್, ಯಲಹಂಕ ಅನಿಲ ವಿದ್ಯುತ್ ಯೋಜನೆ, ವರಾಹಿ ವಿದ್ಯುತ್ ಯೋಜನೆಗಳಿಗೆ ಹಣಕಾಸು ನೆರವು ಪಡೆಯಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಗ್ರಾಮೀಣ ವಿದ್ಯುದೀಕರಣ ನಿಗಮದ ಅಧ್ಯಕ್ಷ ಡಾ. ಪಿ.ವಿ. ರಮೇಶ್ ಈ ಒಪ್ಪಂದಕ್ಕೆ ಸಹಿ ಹಾಕಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಎಲ್ಲ ಯೋಜನೆಗಳನ್ನು ರಾಜ್ಯ ಸರ್ಕಾರದಿಂದಲೇ ಹಣ ತೊಡಗಿಸಿ ಅನುಷ್ಟಾನಗೊಳಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣ ವಿದ್ಯುದೀಕರಣ ನಿಗಮದ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗಾಗಲೇ ಕೆಪಿಸಿಯಿಂದಲೂ ಜಾರಿಯಲ್ಲಿರುವ ಯೋಜನೆಗಳಿಗೆ 30 ಸಾವಿರ ಕೋಟಿ ರೂಪಾಯಿ ಒಪ್ಪಂದ ಮಾಡಿಕೊಳ್ಳಲಾಗಿದೆ.ಆ ಪೈಕಿ 27 ಸಾವಿರ ಕೋಟಿ ರೂ. ಕೇಂದ್ರ ಹಣಕಾಸು ನಿಗಮದಿಂದ 15 ವರ್ಷಗಳಿಗೆ ಸಾಲ ಪಡೆಯಲು ತೀರ್ಮಾನಿಸಲಾಗಿದೆ. ಅಲ್ಲದೆ, ಬೆಸ್ಕಾಂನಿಂದಲೂ 12 ಸಾವಿರ ಕೋಟಿ ರೂ. ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಬ್ಬು ಕಾರ್ಖಾನೆಗಳೊಂದಿಗೆ 500 ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಳಾಗಿತ್ತು. ಆದರೆ, ಕಬ್ಬು ಉತ್ಪಾದನೆ ಕಡಿಮೆ ಆಗಿರುವುದರಿಂದ 100 ಮೆಗಾ ವ್ಯಾಟ್ ಮಾತ್ರ ವಿದ್ಯುತ್ ದೊರೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ನಾಯಕ್ ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ತೊಂದೆಯಾಗಲ್ಲ
*ರಾಜ್ಯದಲ್ಲಿ ಪ್ರಸ್ತುತ ವಿದ್ಯುತ್ ಬೇಡಿಕೆ ಕಡಿಮೆಯಿದ್ದು ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗುವುದಿಲ್ಲ. ಪ್ರತಿನಿತ್ಯ 9 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿದ್ದು 10 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.ಜತೆಗೆ ಬೇಸಿಗೆಯಲ್ಲಿ ತೊಂದರೆಯಾಗದಂತೆ ಖಾಸಗಿ ಕಂಪನಿಗಳ ಜೊತೆ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
– ಡಿ.ಕೆ.ಶಿವಕುಮಾರ್, ಇಂಧನ ಸಚಿವ