ಪಾಲಿಕೆ ವಿರುದ್ಧ ಗುಡುಗಿದ ಹೈಕೋರ್ಟ್
Team Udayavani, Nov 28, 2019, 3:09 AM IST
ಬೆಂಗಳೂರು: ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತು ನ್ಯಾಯಾಲಯದ ಆದೇಶ ಪಾಲನೆ ಬಿಟ್ಟು “ಧಾರ್ಷ್ಟ್ಯ’ ಪ್ರದರ್ಶಿಸಿದ ಬಿಬಿಎಂಪಿ ವಿರುದ್ಧ ಕೆಂಡಾಮಂಡಲಗೊಂಡ ಹೈಕೋರ್ಟ್, ಮೇಯರ್, ಉಪ ಮೇಯರ್ ಹಾಗೂ ಆಡಳಿತ ಪಕ್ಷದ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸುವುದಾಗಿ ಹೇಳಿದೆ.
“ಕೋರ್ಟ್ ಆದೇಶ ಕೊಟ್ಟಿದ್ದು ಅದನ್ನು ಪಾಲನೆ ಮಾಡಲು. ಅದು ಬಿಟ್ಟು ರಾಜಕಾರಣಿಗಳು (ಮೇಯರ್, ಉಪಮೇಯರ್, ಆಡಳಿತ ಪಕ್ಷದ ನಾಯಕರು) ಸಭೆ ಸೇರಿ ಕೋರ್ಟ್ ಆದೇಶದ ಬಗ್ಗೆ ಚರ್ಚಿಸುತ್ತಾರೆ ಎಂದರೆ ಏನರ್ಥ, ಕೋರ್ಟ್ನ ಘನತೆ ಹಾಗೂ ಪ್ರತಿಷ್ಠೆಯ ವಿಚಾರ ಬಂದಾಗ ರಾಜಿಯ ಪ್ರಶ್ನೆಯೇ ಇಲ್ಲ. ಮೂವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ ಕಟಕಟೆಯಲ್ಲಿ ನಿಲ್ಲಿಸುವುದು ದಿಟ’ ಎಂದು ಹೈಕೋರ್ಟ್ ಗುಡುಗಿತು.
ನಗರದಲ್ಲಿ ರಸ್ತೆ ಗುಂಡಿಗಳ ವಿಚಾರವಾಗಿ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬಿಬಿಎಂಪಿ ಭಂಡತನಕ್ಕೆ ಚಾಟಿ ಬೀಸಿತು. ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿದರು.
“ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯಗೊಂಡವರಿಗೆ ಬಿಬಿಎಂಪಿ ಪರಿಹಾರ ನೀಡಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು’ ಎಂದು ಹೈಕೋರ್ಟ್ ನೀಡಿದ್ದ ಆದೇಶದ ಬಗ್ಗೆ ಮೇಯರ್, ಉಪ ಮೇಯರ್, ಆಡಳಿತ ಪಕ್ಷದ ನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಸಭೆ ನಡೆಸಿ, ಈ ವಿಚಾರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಚರ್ಚೆ ಆಗಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ’ ಎಂದು ಪ್ರಮಾಣ ಪತ್ರದಲ್ಲಿ ಹೇಳಿರುವುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿಗಳು ಕೆಂಡಾಮಂಡಲವಾದರು.
“ಬಿಬಿಎಂಪಿಗೆ ಪಾಠ ಕಲಿಸಲೇಬೇಕು. ಕೋರ್ಟ್ ಆದೇಶದ ಬಗ್ಗೆ ಚರ್ಚಿಸಲು ಸಭೆ ನಡೆಸಿದ ಮೇಯರ್ ಹಾಗೂ ಇತರರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಕೊಟ್ಟು, ಕೋರ್ಟ್ ಮುಂದೆ ತಂದು ನಿಲ್ಲಿಸಲೇಬೇಕು. ಕೋರ್ಟ್ ಆದೇಶ ಪಾಲಿಸಬೇಕೋ, ಬೇಡವೋ ಎಂದು ರಾಜಕಾರಣಿಗಳು ನಿರ್ಧರಿಸುತ್ತಾರೆ ಎಂದರೆ ಏನರ್ಥ? ಕೋರ್ಟ್ ಆದೇಶ ಬಗ್ಗೆ ಚರ್ಚಿಸುವ ಔಚಿತ್ಯವೇನಿದೆ. ಇದು ನ್ಯಾಯಾಂಗದಲ್ಲಿ ಹಸ್ತಕ್ಷೇಪವಲ್ಲದೇ ಇನ್ನೇನು.
ಹಾಗಾಗಿ, ಈ ಕ್ಷಣ ಅವರ ಹೆಸರುಗಳನ್ನು ಕೊಡಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ಬಿಬಿಎಂಪಿ ಪರ ವಕೀಲರಿಗೆ ಸೂಚನೆ ನೀಡಿತು. ಆಗ, ಕೋರ್ಟ್ ಹಾಗೂ ಅದರ ಆದೇಶಗಳ ಬಗ್ಗೆ ಪಾಲಿಕೆ ಅತ್ಯಂತ ಗೌರವ ಇಟ್ಟುಕೊಂಡಿದೆ. ಮೇಯರ್ ಹಾಗೂ ಇತರರು ಸಭೆ ನಡೆಸಿದ್ದು ಕೋರ್ಟ್ ಆದೇಶದ ಪಾಲನೆ ವಿಚಾರದಲ್ಲಿ ಇಲ್ಲ. ಪರಿಹಾರ ನೀಡುವ ನಿಯಮಗಳ ಕುರಿತು ಸಭೆ ನಡೆಸಿದ್ದು.
ಅಷ್ಟಕ್ಕೂ ಪಾಲಿಕೆಯ ಆರ್ಥಿಕ ಸ್ಥಿತಿ ಕುಸಿದಿದೆ. ಮೇಲಾಗಿ, ರಸ್ತೆ ಗುಂಡಿಗಳಿಂದ ಅಪಘಾತವಾಗಿ ಗಾಯಗೊಂಡವರಿಗೆ ಪರಿಹಾರ ನೀಡಲು ಕೆಎಂಸಿ ಕಾಯ್ದೆ ಮತ್ತು ನಿಯಮಗಳಲ್ಲಿ ಅವಕಾಶವಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಒಂದು ವಾರ ಕಾಲಾವಕಾಶ ಕೊಡಿ ವಿವರಣೆಯೊಂದಿಗೆ ಕೋರ್ಟ್ ಮುಂದೆ ಬರುತ್ತೇನೆ ಎಂದು ಬಿಬಿಎಂಪಿ ಪರ ವಕೀಲರು ಮನವಿ ಮಾಡಿದರು.
ಅದಕ್ಕೆ, ಒಂದು ವಾರ ಅಲ್ಲ, ಒಂದು ದಿನ ಸಹ ಸಮಯ ಕೊಡಲ್ಲ. ಈಗಾಗಲೇ ಸಾಕಷ್ಟು ಸಮಯ ಕೊಟ್ಟಾಗಿದೆ. ಅಲ್ಲದೇ ಇದೇ ವಿಚಾರವಾಗಿ ಮೂರು ಆದೇಶಗಳನ್ನು ಮಾಡಲಾಗಿದೆ. ಈಗ ಕಾಲಾವಕಾಶ ನೀಡುವ ಪ್ರಶ್ನೆಯೇ ಇಲ್ಲ, ಇನ್ನೇನಿದ್ದರೂ ಹೈಕೋರ್ಟ್ ತನ್ನ ಅಧಿಕಾರ ಚಲಾಯಿಸಬೇಕಷ್ಟೇ. ನಮ್ಮ ಆದೇಶ ಸುಪ್ರೀಂನಲ್ಲಿ ಪ್ರಶ್ನಿಸಿದ್ದಕ್ಕೆ ನಮ್ಮ ಆಕ್ಷೇಪವಿಲ್ಲ. ಅದು ನಿಮ್ಮ ಹಕ್ಕು.
ಬೇಕಿದ್ದರೆ ನಮ್ಮ ಆದೇಶವನ್ನೂ ಸುಪ್ರೀಂಕೋರ್ಟ್ ರದ್ದುಗೊಳಿಸಲಿ ನಮಗೇನು ಅಭ್ಯಂತರವಿಲ್ಲ. ಆದರೆ, ಕೋರ್ಟ್ ಆದೇಶಗಳ ವಿಚಾರದಲ್ಲಿ ಬಿಬಿಎಂಪಿ ನಡೆದುಕೊಳ್ಳುತ್ತಿರುವ ರೀತಿಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಗುರುವಾರ ಬೆಳಿಗ್ಗೆ 10.30ಕ್ಕೆ ಮೇಯರ್, ಉಪ ಮೇಯರ್, ಆಡಳಿತ ಪಕ್ಷದ ನಾಯಕರ ಹೆಸರು ಕೊಡಿ, ಮುಂದೇನು ಮಾಡಬೇಕು ಎಂದು ನಾವು (ಕೋರ್ಟ್) ನಿರ್ಧರಿಸುತ್ತದೆ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ವಿಚಾರಣೆ ಮುಂದೂಡಿದರು.
ಅಫಿಡವಿಟ್ ಅಲ್ಲ, ನಿರ್ಣಯ ಹಿಂಪಡೆಯಿರಿ: ಈ ಮಧ್ಯೆ ತಾವು ಸಲ್ಲಿಸಿದ ಅಫಿಡವಿಟ್ ವಾಪಸ್ ಪಡೆಯುವುದಾಗಿ ಬಿಬಿಎಂಪಿ ಪರ ವಕೀಲರು ಹೇಳಿದರು. ಅದಕ್ಕೆ, ನೀವು ಅಫಿಡವಿಟ್ ವಾಪಸ್ ಪಡೆದು ಕೊಂಡಿರುವುದರಿಂದ ಕೋರ್ಟ್ ಆದೇಶದ ಉದ್ದೇಶ ಸಾಕಾರಗೊಳ್ಳುವುದಿಲ್ಲ. ಅಫಿಡವಿಟ್ ವಾಪಸ್ ಪಡೆದುಕೊಂಡರೂ, ಪಾಲಿಕೆ ತೀರ್ಮಾನ ಹಾಗೆಯೇ ಉಳಿಯುತ್ತದೆ. ಹಾಗಾಗಿ, ಕೋರ್ಟ್ ಆದೇಶದ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ವಿಸ್ತ್ರತ ಚರ್ಚೆ ನಡೆಯಬೇಕಿದೆ ಎಂಬ ನಿರ್ಣಯ ವಾಪಸ್ ಪಡೆಯಿರಿ, ಬಳಿಕ ಅಫಿಡವಿಟ್ ಬಗ್ಗೆ ಮಾತನಾಡಿ ಎಂದು ನ್ಯಾಯಪೀಠ ತಾಕೀತು ಮಾಡಿತು.
ಕಾಯ್ದೆಯಲ್ಲಿ ರಸ್ತೆ ಗುಂಡಿಗೆ ಅವಕಾಶವಿದೆಯೇ?: ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯಗೊಂಡವರಿಗೆ ಪರಿಹಾರ ನೀಡಲು ಕರ್ನಾಟಕ ಮುನ್ಸಿಪಲ್ ಕಾಯ್ದೆ ಮತ್ತು ಅಧಿನಿಯಮಗಳಲ್ಲಿ ಅವಕಾಶವಿಲ್ಲ ಎಂಬ ಬಿಬಿಎಂಪಿ ಪರ ವಕೀಲರ ಹೇಳಿಕೆಗೆ ಗರಂ ಆದ ಮುಖ್ಯ ನ್ಯಾಯಮೂರ್ತಿ, ಪರಿಹಾರ ಕೊಡಲು ಅವಕಾಶ ಇಲ್ಲ ಎಂದಾರೆ ರಸ್ತೆ ಗುಂಡಿಗಳು ಹಾಗೂ ಅಕ್ರಮ ಕಟ್ಟಡಗಳಿಗೆ ಕಾಯ್ದೆಯಲ್ಲಿ ಅವಕಾಶ ಇದೆಯೇ ಇರಬೇಕು ಎಂದು ತೀಕ್ಷ್ಣವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ