ಆಯುಕ್ತರ ಹಾಜರಿಗೆ ಹೈಕೋರ್ಟ್ ನಿರ್ದೇಶನ
Team Udayavani, Jun 16, 2018, 11:35 AM IST
ಬೆಂಗಳೂರು: ಟಾಟಾ ನಗರ ಸಾರ್ವಜನಿಕ ಉದ್ಯಾನವನದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಉದ್ಯಾನವನದಲ್ಲಿ ನಿರ್ಮಾಣಗೊಳ್ಳುತ್ತಿದ್ದ ಕ್ಯಾಂಟೀನ್ ಸ್ಥಳಾಂತರಿಸುವಂತೆ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶ ಪಾಲಿಸದ ಆರೋಪ ಸಂಬಂಧ ಪಾಲಿಕೆ ಆಯುಕ್ತರು ಹಾಗೂ ಮತ್ತಿತರರ ವಿರುದ್ಧ ಸಲ್ಲಿಕೆಯಾಗಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಶುಕ್ರವಾರ ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಟಾಟಾ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಸ್ಥೆ ಪರ ವಕೀಲರು ಹಾಗೂ ಪಾಲಿಕೆ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಹಿಂದೆ ನೀಡಿದ್ದ ಆದೇಶ ಉಲ್ಲಂಘನೆ ಮಾಡಿದ ಪಾಲಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ಜತೆಗೆ ಮುಂದಿನ ವಿಚಾರಣೆ ವೇಳೆ ಪಾಲಿಕೆ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಇತರ ಅಧಿಕಾರಿಗಳು ಖುದ್ದಾಗಿ ಹಾಜರಿರುವಂತೆ ನಿರ್ದೇಶಿಸಿ, ಅರ್ಜಿ ವಿಚಾರಣೆಯನ್ನು ಜೂನ್ 20ಕ್ಕೆ ಮುಂದೂಡಿತು.
ಕರ್ನಾಟಕ ಉದ್ಯಾನವನ, ಆಟದ ಮೈದಾನ, ಬಯಲು ಪ್ರದೇಶಗಳ ಕಾಯಿದೆ ಅನ್ವಯ ಉದ್ಯಾನವನಗಳಲ್ಲಿ ಯಾವುದೇ ವಾಣಿಜ್ಯ ಕಾಮಗಾರಿ ನಡೆಸಲು ಅವಕಾಶ ಇಲ್ಲ ಎಂದು ಆಕ್ಷೇಪಿಸಿ ಈ ಹಿಂದೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರಿಸುವಂತೆ ಆದೇಶಿಸಿತ್ತು. ಈ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ಟಾಟಾ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಸ್ಥೆ, ಪಾಲಿಕೆ ಆಯುಕ್ತರು ಸೇರಿ ಮತ್ತಿತರರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.