ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
Team Udayavani, Nov 14, 2018, 11:50 AM IST
ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಮಂಡಳಿ ಸ್ಥಿರಾಸ್ತಿ ಕಬಳಿಕೆಗೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರದ ವಿರುದ್ಧ ಅಸಮಾಧಾನವ್ಯಕ್ತಪಡಿಸಿರುವ ಹೈಕೋರ್ಟ್, ನ್ಯಾಯಾಲಯ ಈ ಹಿಂದೆ ಹೊರಡಿಸಿದ್ದ ಆದೇಶದ ಕುರಿತ ಮರುಪರಿಶೀಲನಾ ಅರ್ಜಿ ಆದೇಶವನ್ನು ನ.27ರಂದು ಹಾಜರುಪಡಿಸದಿದ್ದರೆ ಅಲ್ಪಸಂಖ್ಯಾತ ಇಲಾಖೆಯ ಪ್ರದಾನ ಕಾರ್ಯದರ್ಶಿ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿದೆ.
ಅನ್ವರ್ ಮಾಣಿಪ್ಪಾಡಿ ವರದಿ ಮಂಡಿಸಬೇಕು ಎಂಬ ಆದೇಶ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಮಾಜಿ ಸಚಿವ ಎಸ್,ಕೆ ಕಾಂತಾ ಮತ್ತಿತರರು ರಾಜ್ಯ ಅಲ್ಪಸಂಖ್ಯಾತರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ಪಿಸಿ ಮಾಜಿ ಸಚಿವ ಎಸ್,ಕೆ ಕಾಂತಾ ಮತ್ತಿತರರು ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ಎಚ್.ಪಿ.ಸಂದೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ.
ವಿಚಾರಣೆ ರಾಜ್ಯಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದಿನೇಶ್ ರಾವ್ ವಾದಿಸಿ, ನ್ಯಾಯಪೀಠದ ಈ ಹಿಂದಿನ ಆದೇಶ ಪ್ರಶ್ನಿಸಿ ಈಗಾಗಲೇ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ವಿಚಾರಣಾ ಹಂತದಲ್ಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಈ ವಾದಕ್ಕೆ ಅಸಮಾಧಾನವ್ಯಕ್ತಪಡಿಸಿದ ನ್ಯಾಯಪೀಠ, ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕಾಲಾವಕಾಶ ನೀಡಿದರೂ ಪಾಲಿಸಿಲ್ಲ.
ಕಡೆಯ ಅವಕಾಶವಾಗಿ ನವೆಂಬರ್ 27ರಂದು ನಡೆಸಲಿರುವ ಈ ಅರ್ಜಿ ವಿಚಾರಣೆ ವೇಳೆ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದ ಆದೇಶ ಹಾಜರುಪಡಿಸಿ. ಇಲ್ಲವೇ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಳ್ಳುವುದಾಗಿ ಎಚ್ಚರಿಸಿ ವಿಚಾರಣೆ ಮುಂದೂಡಿತು.