ICC World Cup: ಬೆಂಗಳೂರಿನ ಕೆಲವೆಡೆ ರಸ್ತೆ ಸಂಚಾರ ನಿಷೇಧ
Team Udayavani, Oct 20, 2023, 11:03 AM IST
ಬೆಂಗಳೂರು: ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳು ನಡೆಯಲಿದ್ದು, ನಿಗದಿತ ದಿನದಂದು ಕ್ರೀಡಾಂಗಣದ ಸುತ್ತ-ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆ ಮತ್ತು ನಿಷೇಧಿಸಿ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಅ.20, ಅ.26, ನ.4, ನ.9 ಮತ್ತು ನ.12 ರಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಪಂದ್ಯಗಳು ನಡೆಯಲಿದೆ. ಈ ದಿನಗಳಲ್ಲಿ ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ ಬಾ ರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠuಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹಾಗೆಯೇ ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿಯಲ್ಲಿ ಸಾರ್ವಜನಿಕ ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದ್ದು, ಪಾವತಿ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಪೊಲೀಸ್ ಭದ್ರತೆ
ಶುಕ್ರವಾರ ಮಧ್ಯಾಹ್ನ 2ಗಂಟೆಗೆ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಪೊಲೀಸರು ಮುಂಜಾಗೃತ ಕ್ರಮವಾಗಿ ಕ್ರೀಡಾಂಗಣದ ಸುತ್ತಮುತ್ತಲೂ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸ್ಥಳದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿàಯ ದಳ, ಕ್ರೀಡಾಂಗಣದೊಳಗೆ ಪ್ರೇಕ್ಷಕರ ಗ್ಯಾಲರಿ ಸೇರಿ ಸಂಪೂರ್ಣ ಮೈದಾನ ಸುತ್ತ-ಮುತ್ತ ತಪಾಸಣೆ ನಡೆಸಿದೆ. 700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಟಿ.ಎಚ್. ಶೇಖರ್ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ