ಸಿಎಂ ಕುಟುಂಬಕ್ಕೆ ಇಂಥ ಸ್ಥಿತಿ ಬಂದಿದ್ದರೆ ಸಮ್ಮನಿರುತ್ತಿದ್ದರಾ?
Team Udayavani, Sep 11, 2017, 11:53 AM IST
ಬೆಂಗಳೂರು: ನಗರದಲ್ಲಿ ಶುಕ್ರವಾರ ಮತ್ತು ಶನಿವಾರ ರಾತ್ರಿ ಬಿದ್ದ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ವೈ “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರಿಗೆ ಈ ಪರಿಸ್ಥಿತಿ ಬಂದಿದ್ದರೆ ಅವರು ಸುಮ್ಮನಿರುತ್ತಿದ್ದರೇ,’ ಎಂದು ಪ್ರಶ್ನಿಸಿದ್ದಾರೆ.
ನಗರದ ವಿವಿಧೆಡೆ ಪ್ರತ್ಯೇಕವಾಗಿ ಭೇಟಿ ನೀಡಿದ ಉಭಯ ನಾಯಕರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದರಲ್ಲದೆ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ, ಸರ್ಕಾರ ಮತ್ತು ಬಿಬಿಎಂಪಿ ಸಕಾಲದಲ್ಲಿ ನೆರವಿಗೆ ಬಾರದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಮಳೆಹಾನಿಗೀಡಾದ ಸರ್ವಜ್ಞನಗರದ ನಂದಕೋಗುಲ ಬಡಾವಣೆ ಮತ್ತು ಶೇಷಾದ್ರಿಪುರದಲ್ಲಿ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಹೋದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಭಾರಿ ಮಳೆಯಿಂದ ಸಾರ್ವಜನಿಕರಿಗೆ ಬಹುಡೊಡ ಪ್ರಮಾಣದ ಹಾನಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಜನರ ಬದುಕು ಬೀದಿಗೆ ಬಂದಿದೆ.
ಆದರೆ, ಸರ್ಕಾರ ಜನರ ದುಡ್ಡನ್ನು ಹಾಳುಮಾಡಿ ಯಾವ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೆ ಇರುವುದೇ ಇಂತಹ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ಪಿ.ಸಿ.ಮೋಹನ್, ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಮತ್ತಿತರರು ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.