ವೇತನ ತಾರತಮ್ಯ ಸರಿಪಡಿಸಲು ಒತ್ತಾಯ
Team Udayavani, Mar 21, 2018, 12:37 PM IST
ಬೆಂಗಳೂರು: ಆರನೇ ವೇತನ ಆಯೋಗದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಆಗಿರುವ ಲೋಪಗಳನ್ನು ಸರಿಪಡಿಸಿ, ಮೌಲ್ಯಮಾಪನ ಬಹಿಷ್ಕಾರಕ್ಕೆ ಅವಕಾಶವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ರಮೇಶ್ ಬಾಬು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಪತ್ರ ಬರೆದಿದ್ದಾರೆ.
ಬೇಡಿಕೆಗಳ ಈಡೇರಿಕೆಗಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹಲವು ಬಾರಿ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಸರ್ಕಾರ ಕೇವಲ ಒಂದು ವೇತನ ಬಡ್ತಿ ಮಂಜೂರು ಮಾಡಿ ಮತ್ತೂಂದು ವೇತನ ಬಡ್ತಿಯನ್ನು ಸ್ವಲ್ಪ ದಿನಗಳ ಬಳಿಕ ನೀಡುವುದಾಗಿ ಭರವಸೆ ಕೊಟ್ಟಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಆರನೇ ವೇತನ ಆಯೋಗದ ಮೂಲಕವೂ ವೇತನ ತಾರತಮ್ಯ ನಿವಾರಣೆಯಾಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಪದವಿ ಪೂರ್ವ ಕಾಲೇಜು ಪರೀಕ್ಷೆ ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಆದ್ದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ವೇತನ ತಾರತಮ್ಯ ನಿವಾರಿಸುವ ಮೂಲಕ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಮೌಲ್ಯಮಾಪನ ಬಹಿಷ್ಕಾರಕ್ಕೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.