ಜೆಡಿಎಸ್ಗೆ ಎದುರಾಗಿದೆ ಹೊಸ ಆತಂಕ
Team Udayavani, Jul 30, 2018, 6:10 AM IST
ಬೆಂಗಳೂರು: ಆಷಾಢ ಮುಗಿಯುತ್ತಿದ್ದಂತೆ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಜೆಡಿಎಸ್ಗೆ ಹೊಸ ಆತಂಕ ಎದುರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಪಕ್ಷದ ನಾಯಕರ ತೀರ್ಮಾನಕ್ಕೆ ಬಹುತೇಕ ಭಾಗಗಳಲ್ಲಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ತಮ್ಮ ದಾರಿ ತಾವು ನೋಡಿಕೊಳ್ಳುವ ಹಂತಕ್ಕೆ ತಲುಪಿದ್ದಾರೆ.
ರಾಜ್ಯಾಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಜೆಡಿಎಸ್ ಮಾಡಿಕೊಂಡಿರುವ ಮೈತ್ರಿಯಲ್ಲಿ ಈಗಾಗಲೇ ಕೆಲವು ಅಪಸ್ವರ ಕೇಳಿಬರುತ್ತಿರುವುದರಿಂದ ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗ್ಗೆ ಆತಂಕ ಕಾಣಿಸಿಕೊಂಡಿದೆ. ಹೀಗಿರುವಾಗ ಪ್ರತ್ಯೇಕವಾಗಿ ಪಕ್ಷ ಸಂಘಟನೆ ಮಾಡಿಕೊಳ್ಳುವುದು ಬಿಟ್ಟು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ಅದು ಪಕ್ಷದ ಮೇಲೆ ಪ್ರತೀಕೂಲ ಪರಿಣಾಮ ಬೀರಲಿದೆ. ಅಲ್ಲದೆ, ಕಾರ್ಯಕರ್ತರಿಗೂ ಸಮಸ್ಯೆಯಾಗಲಿದೆ. ಹೀಗಾಗಿ ಮೈತ್ರಿ ಮುಂದುವರಿಸಿದರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಕಾರ್ಯಕರ್ತರ ವಲಯದಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಲೋಕಸಭೆಯಲ್ಲಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಜತೆಗಿನ ಮೈತ್ರಿ ಮುಂದುವರಿಸುವುದು ಜೆಡಿಎಸ್ಗೆ ಅನಿವಾರ್ಯವಾದರೂ ಕಾರ್ಯಕರ್ತರಿಗೆ ಮಾತ್ರ ಇದು ಸರಿಬರುತ್ತಿಲ್ಲ. ಕಳೆದ ಹಲವು ದಶಕಗಳಿಂದ ಪರಸ್ಪರ ವಿರೋಧಿಗಳಾಗಿದ್ದವರು ಇದೀಗ ಒಟ್ಟಾಗಿ ಹೋಗುವುದು ಕಷ್ಟ ಎಂಬುದು ಅವರ ಅಭಿಪ್ರಾಯ.
ಮೇಲಾಗಿ ಮೈತ್ರಿ ಮುಂದುವರಿದರೆ ರಾಷ್ಟ್ರಮಟ್ಟದಲ್ಲಿ ಒಂದೆರಡು ಸ್ಥಾನ ಹೆಚ್ಚುವರಿಯಾಗಿ ಪಡೆಯಲು ಜೆಡಿಎಸ್ಗೆ ಅನುಕೂಲ ಮಾಡಿಕೊಡಬಹುದಾದರೂ ರಾಜ್ಯ ಮಟ್ಟ ಅಥವಾ ಸ್ಥಳೀಯ ಮಟ್ಟದಲ್ಲಿ ಪಕ್ಷದ ಬೆಳವಣಿಗೆಗೆ ಧಕ್ಕೆಯಾಗುತ್ತದೆ. ಮೇಲಾಗಿ ಇದು ಕಾರ್ಯಕರ್ತರನ್ನು ಆತಂಕಕ್ಕೆ ತಳ್ಳುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಜತೆ ಮೈತ್ರಿ ಮುಂದುವರಿಸಿದರೆ ಸುರಕ್ಷಿತ ಜಾಗ ಹುಡುಕಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸಮಸ್ಯೆ ಏನು?:
ಮೊದಲಿನಿಂದಲೂ ರಾಜ್ಯದಲ್ಲಿ ಜೆಡಿಎಸ್ಗೆ ಕಾಂಗ್ರೆಸ್ಸೇ ಮೊದಲ ರಾಜಕೀಯ ವೈರಿ. ಅದರಲ್ಲೂ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆಯುವ ಮಟ್ಟಕ್ಕೆ ಪರಸ್ಪರ ವಿರೋಧವಿದೆ. ಪರಿಸ್ಥಿತಿ ಹೀಗಿರುವಾಗ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿರುವ ಕಡೆ ತಮಗೆ ಗೌರವ ಸಿಗುವುದಿಲ್ಲ ಎಂಬ ಆತಂಕ ಅವರನ್ನು ಕಾಡುತ್ತಿದೆ.
ಇನ್ನೊಂದೆಡೆ ಜೆಡಿಎಸ್ ಬಲಾಡ್ಯವಾಗಿರುವುದು ಹಳೇ ಮೈಸೂರು ಭಾಗದಲ್ಲಿ ಮಾತ್ರ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆ ಜೆಡಿಎಸ್ಗೆ ಅಸ್ತಿತ್ವದ ಪ್ರಶ್ನೆಯೂ ಕಾಡುತ್ತಿದೆ. ಇದರ ಮಧ್ಯೆಯೂ ಒಂದೆರಡು ಕಡೆ ಪಕ್ಷ ಉತ್ತಮ ಸಾಧನೆ ತೋರುತ್ತಿದೆಯಾದರೂ ಜಿಲ್ಲಾ ಮಟ್ಟದಲ್ಲಿ ನೋಡುವುದಾದರೆ ಒಟ್ಟಾರೆ ಕಾಂಗ್ರೆಸ್ ಶಕ್ತಿಯುತವಾಗಿದೆ. ಹೀಗಾಗಿ ಕಾಂಗ್ರೆಸ್ ಜತೆ ಮೈತ್ರಿ ಮುಂದುವರಿದು ಲೋಕಸಭಾ ಸ್ಥಾನವನ್ನು ಆ ಪಕ್ಷಕ್ಕೆ ಬಿಟ್ಟುಕೊಟ್ಟರೆ ಕಾರ್ಯಕರ್ತರು ಚುನಾವಣೆ ಸಮಯದಲ್ಲಿ ಮೂಲೆಗುಂಪಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಜತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಲಾಭವಾಗಬಹುದು. ಆದರೆ, ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಕಡೆ ಸಮಸ್ಯೆಯೇ ಹೆಚ್ಚು ಎಂಬ ಅಭಿಪ್ರಾಯ ಕಾರ್ಯಕರ್ತರ ವಲಯದಿಂದ ಕೇಳಿಬಂದಿದೆ ಎನ್ನಲಾಗಿದೆ.
ಬಿಜೆಪಿಯತ್ತ ಮುಖ?:
ಹೀಗಾಗಿ ಅನೇಕ ಜಿಲ್ಲೆಗಳಲ್ಲಿ ವೈರಿಯ ವೈರಿ ಮಿತ್ರ ಎಂಬಂತೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯತ್ತ ಮುಖ ಮಾಡಲು ಚಿಂತನೆ ನಡೆಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಎದುರಾದರೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಅಲ್ಲದೆ, ಲೋಕಸಭೆ ಚುನಾವಣೆಯಲ್ಲೂ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ.
ಹೀಗಾಗಿ ಕಾಂಗ್ರೆಸ್ ಜತೆ ಕೈಜೋಡಿಸುವುದಕ್ಕಿಂತ ಬಿಜೆಪಿ ಜತೆ ಹೋದರೆ ರಾಜಕೀಯವಾಗಿ ಲಾಭವಾಗಬಹುದು ಎಂಬ ಲೆಕ್ಕಾಚಾರದೊಂದಿಗೆ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿದರೆ ಆ ವೇಳೆ ಬಿಜೆಪಿ ಜತೆ ಹೋಗುವುದು ಒಳಿತು ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿದರೆ ಒಟ್ಟಾರೆ ಸ್ಥಾನ ಗಳಿಕೆಯಲ್ಲಿ ಪಕ್ಷಕ್ಕೆ ಲಾಭವಾಗಬಹುದು. ಆದರೆ, ಸ್ಥಳೀಯ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಹೀಗಾಗಿ ಮೈತ್ರಿ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ಅವರು ಪಕ್ಷ ತೊರೆಯುತ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂಬುದನ್ನು ಉತ್ತರ ಕರ್ನಾಟಕ ಭಾಗದ ಜೆಡಿಎಸ್ ಮುಖಂಡರೊಬ್ಬರು ಒಪ್ಪಿಕೊಳ್ಳುತ್ತಾರೆ.
ಈಮಧ್ಯೆ, ಗ್ರಹಣಕ್ಕೆ ಮುನ್ನ ತಿರುಪತಿ ಸೇರಿ ಪ್ರಮುಖ ದೇವಾಲಯಗಳ ಭೇಟಿ ಮಾಡಿ ಗ್ರಹಣ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಮಾಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಲೋಕಸಭೆ ಚುನಾವಣೆ ಕೆಲಸಕ್ಕೆ ಅಧಿಕೃತವಾಗಿ ಧುಮುಕಲಿದ್ದಾರೆ. ರಾಜ್ಯಾಧ್ಯಕ್ಷರಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಪ್ರಮುಖ ಚುನಾವಣಾ ಪ್ರಚಾರಕರಾಗಲಿದ್ದು, ದೇವೇಗೌಡರೇ ಚುನಾವಣಾ ನಾಯಕತ್ವ ವಹಿಸಿಕೊಳ್ಳಲು ಮುಂದಾಗಿದ್ದಾರೆ.
ರಾಜ್ಯಾಧ್ಯಕ್ಷರಾಗಿರುವ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿರುವುದರಿಂದ ಕಾರ್ಯದೊತ್ತಡ ಹೆಚ್ಚಾಗಿದ್ದು ಪಕ್ಷ ಸಂಘಟನೆಗೆ ಸಮಯ ಮೀಸಲಿಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಇಬ್ಬರು ಉತ್ಸಾಹಿ ಹೊಸ ಕಾರ್ಯಾಧ್ಯಕ್ಷರ ನೇಮಿಸಿ ತಾನೇ ರಾಜ್ಯ ಪ್ರವಾಸ ಮಾಡಲು ಗೌಡರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.
– ಪ್ರದೀಪ್ಕುಮಾರ್ ಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್