ಜಡ್ಜ್ ಗಳ ಅಸಮಾಧಾನ ಆತಂಕಕಾರಿ ಬೆಳವಣಿಗೆ
Team Udayavani, Jan 14, 2018, 6:10 AM IST
ಬೆಂಗಳೂರು: ಸುಪ್ರೀಂಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್ನಲ್ಲಿ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳು ನಡೆಯುತ್ತಿವೆ ಎಂದು ಆರೋಪಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ. ಬಿ.ಕೆ. ಚಂದ್ರಶೇಖರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ನಾಯಮೂರ್ತಿಗಳು ಪ್ರಕರಣಗಳನ್ನು ನೀಡುವಾಗ ತಾರತಮ್ಯ ಮಾಡುವುದು ಹಾಗೂ ಮೆಡಿಕಲ್ ಹಗರಣ ಹಾಗೂ ಆಧಾರ್ ಪ್ರಕರಣಗಳನ್ನು ನೀಡುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿರುವುದನ್ನು ನಾಲ್ವರು ನ್ಯಾಯಮೂರ್ತಿಗಳು ಬಹಿರಂಗ ಪಡೆಸಿದ್ದಾರೆ.
ಹೀಗಾಗಿ ಜನ ಸಮುದಾಯ ಸುಪ್ರೀಂಕೋರ್ಟ್ ಬಗ್ಗೆ ಅನುಮಾನದಿಂದ ನೋಡುವಂತಾಗಿದೆ. ಈ ಬೆಳವಣಿಗೆ
ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ತಿಳಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮುಖ್ಯಮಂತ್ರಿ
ಸಿದ್ದರಾಮಯ್ಯ ಹಿಂದೂನೇ ಅಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಅವರು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ
ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದರು.