ಶುಕ್ರವಾರ ರಾಜ್ಯ ಬಿಜೆಪಿ ಕಾರ್ಯಕಾರಿಣಿ: ಸಿಎಂ ರಾಜ್ಯ ಪ್ರವಾಸಕ್ಕೆ ನಿಗದಿಯಾಗುವುದೇ ಮುಹೂರ್ತ?
Team Udayavani, Oct 5, 2022, 11:57 AM IST
ಬೆಂಗಳೂರು : ದಸರಾ ಮುಕ್ತಾಯದ ಬೆನ್ನಲ್ಲೇ ಸಾಲು ಸಾಲು ರಾಜಕೀಯ ಚಟುವಟಿಕೆಗಳು ಗರಿಗೆದರುವುದಕ್ಕೆ ರಾಜ್ಯ ಬಿಜೆಪಿಯಲ್ಲಿ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಲಿದೆ.
ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮುಂಚೂಣಿ ನಾಯಕರು ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪಾಲಿಗೆ ರಾಜಕೀಯವಾಗಿ ಮಹತ್ವದ್ದಾಗಿರುವ ಪ್ರವಾಸದ ದಿನಾಂಕ ನಿಗದಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಅಂಚಿನಲ್ಲಿ ಸೋತ 52 ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಒಳಗೊಂಡು ಈ ಯಾತ್ರೆ ನಡೆಯುವುದು ವಿಶೇಷವಾಗಿದ್ದು, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಆಯ್ದುಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಳೆದ ಕೆಲ ತಿಂಗಳಿಂದ ಬೊಮ್ಮಾಯಿ ರಾಜ್ಯ ಪ್ರವಾಸದ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಆದರೆ ನಾನಾ ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಚುನಾವಣಾ ವರ್ಷವಾದ್ದರಿಂದ ಬಿಜೆಪಿ ಈ ಬಗ್ಗೆ ಒಂದು ನಿರ್ಧಾರವನ್ನು ತೆಗೆದುಕೊಳ್ಳಲೇಬೇಕಿದೆ. ಕಾರ್ಯಕಾರಿಣಿಯಲ್ಲಿ ಆ ದಿನಾಂಕ ನಿಗದಿಯಾಗಲಿದೆ.