ಡಿಸಿಎಂ ಮನೆ ಎದುರು ಕುಣಿಗಲ್ ಜನತೆ ಪ್ರತಿಭಟನೆ
Team Udayavani, Jun 22, 2019, 3:06 AM IST
ಬೆಂಗಳೂರು: ಹೇಮಾವತಿ ನಾಲೆಗೆ ಲಿಂಕ್ ಕೆನಾಲ್ ನಿರ್ಮಿಸುವ ಮೂಲಕ ಕುಣಿಗಲ್ ತಾಲೂಕಿಗೆ ನೀರು ಹರಿಸುವಂತೆ ಆಗ್ರಹಿಸಿ ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ನೇತೃತ್ವದಲ್ಲಿ, ತಾಲೂಕಿನ ಜನತೆ ಶುಕ್ರವಾರ ಉಪ ಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರಿನ ನಿವಾಸದ ಎದುರು ಪತ್ರಿಭಟನೆ ನಡೆಸಿದರು.
ಕುಣಿಗಲ್ ತಾಲೂಕಿಗೆ ನೀರು ಹರಿಸುವಂತೆ ಕಳೆದ 25 ವರ್ಷದಿಂದ ಹೋರಾಟ ಮಾಡಲಾಗುತ್ತಿದ್ದು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಲಿಂಕ್ ಕೆನಾಲ್ ಮೂಲಕ ಕುಣಿಗಲ್ ತಾಲೂಕಿಗೆ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ. ಕೆಲವರು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ವಿರೋಧಕ್ಕೆ ಮಣಿಯದೆ, ತಾಲೂಕಿಗೆ ನೀರು ಹರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಹೇಮಾವತಿ ನಾಲೆಗೆ ಲಿಂಕ್ ಕೆನಾಲ್ ನಿರ್ಮಿಸಲು ಪರ ವಿರೋಧ ಅಭಿಪ್ರಾಯವಿದೆ. ಈ ಬಗ್ಗೆ ಮುಂದಿನ ವಾರ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಹೇಮಾವತಿ ನಾಲೆಗೆ ಲಿಂಕ್ ಕೆನಾಲ್ ಮಾಡುವ ಸಂಬಂಧ ಈ ಹಿಂದೆ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಹೇಮಾವತಿಯಿಂದ ಪೈಪ್ಲೈನ್ ಮೂಲಕ ನೀರು ಹರಿಸಬಾರದು, ಬೇಕಿದ್ದರೆ ಒಪನ್ ಕೆನಾಲ್ ಮೂಲಕ ನೀರು ಬಿಡಿ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ. ಈಗಿರುವ ಕೆನಾಲನ್ನೇ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿದ್ದಾರೆ. ಇಲ್ಲಿನ ಪರಿಸ್ಥಿತಿ ಅವಲೋಕಿಸಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ಪರಮೇಶ್ವರ್ ಹೇಳಿದರು.