ಗುರಿ ಇಲ್ಲದ ಭಾಷಣ: ಜಗದೀಶ್ ಶೆಟ್ಟರ್
Team Udayavani, Feb 6, 2018, 7:00 AM IST
ಬೆಂಗಳೂರು: ಗುರಿ ಇಲ್ಲದ ಸುಳ್ಳಿನ ಭಾಷಣ ಮಾಡಿಸುವ ಮೂಲಕ ರಾಜ್ಯ ಸರ್ಕಾರ ರಾಜ್ಯಪಾಲರಿಂದ ಅಪರಾಧ ಮಾಡಿಸಿದೆ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯ ಸರ್ಕಾರವು ಸಾಧನೆಗಳ ಬಗ್ಗೆ ತಪ್ಪು ಮಾಹಿತಿ ನೀಡಿ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ದೂರಿದರು.
ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದ ಬಗ್ಗೆ ನಿರ್ಧಿಷ್ಠ ಅಂಕಿ ಅಂಶಗಳಿಲ್ಲ. ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ನೀರಾವರಿ ಇಲಾಖೆಗಳ ಸಾಧನೆಗಳ ಬಗ್ಗೆ ಸತ್ಯಕ್ಕೆ ದೂರವಾದ ಮಾಹಿತಿ ಇದೆ. ಇಲಾಖೆಗಳ ಸಾಧನೆಗಳ ಬಗ್ಗೆ ನಿರ್ಧಿಷ್ಠ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಬೆಂಗಳೂರು ಕ್ರೈಮ್ ಸಿಟಿಯಾಗಿ ಬದಲಾವಣೆಯಾಗಿದೆ. ಭ್ರಷ್ಟಾಚಾರ ಮತ್ತು ಅಪರಾಧ ಕೃತ್ಯಗಳಲ್ಲಿ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಹೇಳಿದರು.