ಮೇಕೆದಾಟಿಗೆ ಜಲ ಆಯೋಗ ಓಕೆ
Team Udayavani, Nov 27, 2018, 6:00 AM IST
ಬೆಂಗಳೂರು: ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿದ್ದು ತಮಿಳುನಾಡು ವಿರುದ್ಧ ಕರ್ನಾಟಕಕ್ಕೆ ಜಯ ಸಿಕ್ಕಿದೆ.
ಈ ಯೋಜನೆಯ ಸಾಧ್ಯತೆ ವರದಿ ಬಗ್ಗೆ ಕೇಂದ್ರ ಜಲ ಆಯೋಗ ಸಹಮತ ವ್ಯಕ್ತಪಡಿಸಿದ್ದು, ಸಮಗ್ರ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಿ ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ತೀರ್ಮಾ ನಿಸಿತ್ತು. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗಕ್ಕೂ ಮನವಿ ಮಾಡಿತ್ತು.
ಆದರೆ, ತಮಿಳುನಾಡಿನ ಆಗಿನ ಸಿಎಂ ದಿ.ಜಯಲಲಿತಾ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರಿಂದ ಒಪ್ಪಿಗೆ ಸಿಕ್ಕಿರಲಿಲ್ಲ.
ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಮತ್ತೆ ಈ ಯೋಜನೆ ಮುನ್ನೆಲೆಗೆ ಬಂದಿತ್ತು. ಕೇಂದ್ರ ಸರ್ಕಾರದ ಒಪ್ಪಿಗೆ ದೊರೆತರೆ ಆರಂಭಿಸುವುದಾಗಿ ಬಜೆಟ್ನಲ್ಲೇ ಘೋಷಿಸಿದ್ದರು. ಇದರಂತೆ ಯೋಜನೆಯ ಸಾಧ್ಯತೆಯ ವರದಿಯನ್ನು ರಾಜ್ಯ ಸರ್ಕಾರಕ್ಕೆ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಕೆ ಮಾಡಿತ್ತು.
ಪ್ರಧಾನಿ ಭೇಟಿ ಮಾಡಿದ್ದ ಸಿಎಂ: ಇಷ್ಟೇ ಅಲ್ಲ, ಎರಡು ತಿಂಗಳ ಹಿಂದೆ ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ,ಮೇಕೆದಾಟು ಯೋಜನೆ ಬಗ್ಗೆ ಮನದಟ್ಟು ಮಾಡಿದ್ದರು. ಬೆಂಗಳೂರು ಮತ್ತು ಸುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಈ ಯೋಜನೆಯ ಅಗತ್ಯವಿದೆ ಎಂದು ಹೇಳಿದ್ದರು. ಇತ್ತೀಚೆ ಗಷ್ಟೇ ಕೇಂದ್ರ ಜಲ ಆಯೋಗ ಸಭೆ ನಡೆಸಿ ರಾಜ್ಯ ಸರ್ಕಾರದ ಪ್ರಾಥಮಿಕ ಮಾಹಿತಿಗೆ ಒಪ್ಪಿಗೆ ನೀಡಿದೆ.
ಅಲ್ಲದೆ ತಮಿಳುನಾಡಿಗೆ ಹರಿಯುವ ನೀರಿನಲ್ಲಿ ವ್ಯತ್ಯಾಸವಾಗದಂತೆ ಯೋಜನಾ ವರದಿ ಸದ್ಧಪಡಿಸುವಂತೆಯೂ ಸೂಚಿಸಿದೆ ಎಂದು ಹೇಳಲಾಗಿದೆ.
ಯೋಜನೆಯ ಲೆಕ್ಕಾಚಾರ:
ಬೆಂಗಳೂರಿನಿಂದ 100 ಕಿಲೋ ಮೀಟರ್ ದೂರದಲ್ಲಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸುಮಾರು 5912 ಕೋಟಿ ರೂ. ವೆಚ್ಚದಲ್ಲಿ ಸುಮಾರು 66 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟು ನಿರ್ಮಾಣ ಮಾಡಿ, ಬೆಂಗಳೂರು, ರಾಮನಗರ ಜಿಲ್ಲೆ ಸೇರಿದಂತೆ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವುದು ಹಾಗೂ ವಿದ್ಯುತ್ ಉತ್ಪಾದನೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿರುವುದರಿಂದ ಕನ್ನಂಬಾಡಿ ಆಣೆಕಟ್ಟೆಯಿಂದ ಬೆಂಗಳೂರಿಗೆ ನೀರು ತರುವುದು ರಾಜ್ಯ ಸರ್ಕಾರಕ್ಕೆ ದುಬಾರಿಯಾಗಿ ಪರಿಣಮಿಸಿದೆ. ಹೀಗಾಗಿ ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನು ಮೇಕೆದಾಟು ಬಳಿ ಅಣೆಕಟ್ಟು ಕಟ್ಟಿ ಸುಮಾರು 16 ಟಿಎಂಸಿ ಕುಡಿಯುವ ನೀರಿಗಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಅಲ್ಲದೇ ಸುಮಾರು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ರಾಜಧಾನಿಗೆ ವಿದ್ಯುತ್ ಸಮಸ್ಯೆ ನೀಗಿಸುವುದೂ ಯೋಜನೆಯ ಉದ್ದೇಶವಾಗಿದೆ.
ಕೇಂದ್ರ ಜಲ ಆಯೋಗ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಕೆದಾಟು ಯೋಜನೆಯ ಸಾಧ್ಯತಾ ವರದಿ ಒಪ್ಪಿಕೊಂಡಿದ್ದು, ಯೋಜನೆಯ ಸಮಗ್ರ ವರದಿ ಸಿದ್ಧಪಡಿಸಿ ಕಳುಹಿಸುವಂತೆ ಸೂಚಿಸಿದೆ. ಈ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ ಪತ್ರ ದೊರೆತ ತಕ್ಷಣ ರಾಜ್ಯ ಸರ್ಕಾರ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಿದೆ. ಈಗಾಗಲೇ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯ ಸಮಗ್ರ ವರದಿ ಸಿದ್ದಪಡಿಸಿದ್ದು, ಜಲ ಆಯೋಗದ ಸೂಚನೆಯಂತೆ ಪರಿಷ್ಕರಿಸಿ ಹೊಸದಾಗಿ ವರದಿ ಸಲ್ಲಿಸಲಾಗುವುದು ಎಂದು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಹೀಗಾಗಿ ಕಾವೇರಿ ನದಿಗೆ ಅಣೆಕಟ್ಟು ಕಟ್ಟಲು ಯಾವುದೇ ಕಾನೂನಿನ ತೊಡಕಿಲ್ಲ. ಕಾವೇರಿ ನ್ಯಾಯಮಂಡಳಿ ಆದೇಶದಂತೆ ತಮಿಳುನಾಡಿಗೆ ವಾರ್ಷಿಕ 177.25 ಟಿಎಂಸಿ ನೀರು ಹರಿಸುವುದರಿಂದ, ತಮಿಳುನಾಡು ತಕರಾರು ತೆಗೆಯಲು ಅವಕಾಶವಿಲ್ಲ.
– ಮೋಹನ್ ಕಾತರಕಿ, ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರದ ಪರ ವಕೀಲ
– ಶಂಕರ ಪಾಗೋಜಿ