ಉತ್ತರ ಕರ್ನಾಟಕ ಅಭಿವೃದ್ಧಿ ಜಪ, ಹೈಕ ಭಾಗಕ್ಕೆ ಒತ್ತು
Team Udayavani, Feb 7, 2017, 3:45 AM IST
ಬೆಂಗಳೂರು: ರಾಜ್ಯಪಾಲರು ಮಾಡಿದ ಭಾಷಣದಲ್ಲಿ ರಾಜ್ಯ ಸರ್ಕಾರವು ಹೈದರಾಬಾದ್ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ, ನಂಜುಂಡಪ್ಪ ವರದಿ ಅನುಷ್ಟಾನ, ಪ್ರಮುಖ ನೀರಾವರಿ ಯೋಜನೆಗಳ ಪ್ರಗತಿ, ಕರಾವಳಿ ಭಾಗದ ಮೀನುಗಾರರಿಗೆ ಸೌಲಭ್ಯ ಒದಗಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಸ್ತಾಪಿಸಲಾಗಿದೆ.
ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಐದು ವರ್ಷದಲ್ಲಿ 50 ಸಾವಿರ ಕೋಟಿ ರೂ. ಒದಗಿಸುವ ಗುರಿ ಹೊಂದಿತ್ತು. ಅದರಂತೆ ಕೃಷ್ಣಾ ಮೇಲ್ದಂಡೆ ಜಲಾನಯನ ಪ್ರದೇಶದಲ್ಲಿ ನೀರಾವರಿ ಸಾಮರ್ಥ್ಯ ಹೆಚ್ಚಿಸುವುದು ಸೇರಿದಂತೆ ರಾಜ್ಯದಲ್ಲಿ ಭಾರೀ ಮತ್ತು ಮಧ್ಯಮ ನೀರಾವರಿ ಯೋಜನೆಗಳಿಗೆ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ 42,540 ಕೋಟಿ ರೂ. ಒದಗಿಸಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.
ಇದಲ್ಲದೆ, ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನಕ್ಕಾಗಿ ವಿಶ್ವೇಶ್ವರಯ್ಯ ಜಲ ನಿಗಮ ಸ್ಥಾಪಿಸಲಾಗಿದೆ. ವಿಶ್ವಬ್ಯಾಂಕ್ ನೆರವಿನೊಂದಿಗೆ 276 ಕೋಟಿ ರೂ. ವೆಚ್ಚದಲ್ಲಿ ಅಣೆಕಟ್ಟು ಪುನಶ್ಚೇತನ ಮತ್ತು ಅಭಿವೃದ್ಧಿ ಕಾರ್ಯಕ್ರಮದಡಿ 27 ಭಾರೀ ಮತ್ತು ಮಧ್ಯಮ ನೀರಾವರಿ ಅಣೆಕಟ್ಟೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಆಲಮಟ್ಟಿ ಮತ್ತು ನಾರಾಯಣಪುರ ಅಣೆಕಟ್ಟೆಗಳ ಪುನಶ್ಚೇತನ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗಾಗಿ ಕೇಂದ್ರ ಜಲ ಆಯೋಗವು ರಾಜ್ಯಕ್ಕೆ ಅತ್ಯುತ್ತಮ ನಿರ್ವಹಣೆಯ ಗೌರವ ಪ್ರಶಸ್ತಿ ನೀಡಿದೆ ಎಂದು ವಿವರಿಸಿದರು.
ನಂಜುಂಡಪ್ಪ ವರದಿ ಜಾರಿಗೆ 3000 ಕೋಟಿ ರೂ.
ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಡಾ.ನಂಜುಂಡಪ್ಪ ಸಮಿತಿ ನೀಡಿದ ವರದಿಯ ಶಿಫಾರಸು ಜಾರಿಗೊಳಿಸಲು ಪ್ರಸಕ್ತ ವರ್ಷ ಸರ್ಕಾರದಿಂದ 3000 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜತೆಗೆ ಹೈದರಾಬಾದ್ಧಿ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1000 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.
ಇದಲ್ಲದೆ, ಹೈದರಾಬಾದ್-ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ಕಡಿಮೆ ಮಾಡಲು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ನಿಯಮದಡಿ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಆ ಭಾಗದ ಜನರಿಗಾಗಿ 50301 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಪೈಕಿ 12,326 ಹುದ್ದೆಗಳನ್ನು ಕಾರ್ಯನಿರತ ಸಿಬ್ಬಂದಿ ಮಿತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗಿದೆ. 13,135 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭಿಸಲಾಗಿದ್ದು ಯೋಜನೆಯ ಶೇ.50 ರಷ್ಟು ವೆಚ್ಚ ರಾಜ್ಯ ಸರ್ಕಾರವೇ ಭರಿಸಿ ಉಚಿತವಾಗಿ ಜಮೀನು ಸಹ ನೀಡಲಾಗಿದೆ ಎಂದು ರಾಜ್ಯಪಾಲ ವಜೂಭಾಯ್ ವಾಲಾ ತಿಳಿಸಿದರು.
ಕಲಬುರಗಿ , ಗದಗ, ಕೊಪ್ಪಳ, ಕಾರವಾರ, ಕೊಡುಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭಿಸಿ ಹೆಚ್ಚುವರಿಯಾಗಿ 900 ವೈದ್ಯಕೀಯ ಸೀಟು ಲಭ್ಯವಾಗುವಂತೆ ಮಾಡಲಾಗಿದೆ ಎಂದು ಹೇಳಿದರು.
ರೈಲ್ವೆ ಇಲಾಖೆ ಸಹಭಾಗಿತ್ವದಲ್ಲಿ ಹತ್ತು ಬೃಹತ್ ರೈಲ್ವೆ ಯೋಜನೆ ಅನುಷ್ಟಾನಗೊಳಿಸುತ್ತಿದ್ದು, ಬೀದರ್ಧಿಕಲಬುರಗಿ, ಬಾಗಲಕೋಟೆಧಿಕುಡಚಿ ವಿಭಾಗದ ಬಾಗಲಕೋಟೆಧಿಕಜ್ಜಿದೋಣಿಯಲ್ಲಿ ಸುರಂಗ ಮಾರ್ಗಗಳು ಮತ್ತು ಯಾದಗಿರಿಯಲ್ಲಿ ರೈಲ್ವೆ ಬೋಗಿ ಕಾರ್ಖಾನೆ ಯೋಜನೆ ಪ್ರಸಕ್ತ ಸಾಲಿನಲ್ಲಿಪೂರ್ಣಗೊಳಿಸುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ರೈಲ್ವೆ ಮಾರ್ಗಗಳ ಕಾರ್ಯಜಾಲ ಮತ್ತು ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಬೆಂಗಳುರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ರನ್ವೇ ಹಾಗೂ 2 ನೇ ಟರ್ಮಿನಲ್ ಕಟ್ಟಡ ನಿರ್ಮಾಣದ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಅಭಿವೃದ್ಧಿಗೆ ಬದ್ಧ
ಸರ್ಕಾರವು ಹೈದರಾಬಾದ್ಧಿಕರ್ನಾಟಕ ಭಾಗದ ಪ್ರದೇಶದ ಜನರ ಅಭಿವೃದ್ಧಿಗೆ ಬದ್ಧವಾಗಿವೆ. 371 (ಜೆ) ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಕೈಗೊಂಡಿರುವ ಕ್ರಮವೇ ಇದ್ದಕ್ಕೆ ಸಾಕ್ಷಿ ಎಂದು ರಾಜ್ಯಪಾಲರು ಹೇಳಿದರು.
ಡೀಸೆಲ್ ಸಹಾಯಧನ 65 ಕೋಟಿ ರೂ.
ಮೀನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2016ಧಿ17ನೇ ಸಾಲಿನಲ್ಲಿ ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಸಹಾಯಧನ ನೀಡಲು 65 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದರಿಂದ 3451 ದೋಣಿ ಮಾಲೀಕರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.