ರಾಜ್ಯಪಾಲರನ್ನು ಭೇಟಿಯಾದ ಪರಮೇಶ್ವರ್, ಡಿಕೆಶಿ
Team Udayavani, Feb 5, 2019, 12:30 AM IST
ಬೆಂಗಳೂರು: ಫೆ. 6ರಿಂದ ಆರಂಭವಾಗಲಿರುವ ಜಂಟಿ ಅಧಿವೇಶನ ಉದ್ಧೇಶಿಸಿ ಭಾಷಣ ಮಾಡುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಆಹ್ವಾನ ನೀಡಿದ್ದಾರೆ. ಸೋಮವಾರ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳಿ, ರಾಜ್ಯಪಾಲರಿಗೆ ಅಧಿಕೃತ ಆಹ್ವಾನ ನೀಡಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಅಲ್ಲದೇ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಗಳ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು. ರಾಜ್ಯಪಾಲರೊಂದಿಗೆ ಯಾವುದೇ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಫೆ. 8 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಿದರು.
ರಾಜಕೀಯಕ್ಕೆ ಭೋಜನ ಕೂಟ: ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಂಗಳವಾರ ಪಕ್ಷದ ಸಚಿವರಿಗೆ ಭೋಜನ ಕೂಟ ಏರ್ಪಡಿಸಿದ್ದಾರೆ. ನಾನು ಫೆ. 6 ರಂದು ಸಭೆ ಎರಡೂ ಪಕ್ಷಗಳ ಶಾಸಕರು ಹಾಗೂ ಸಂಸದರಿಗೆ ಭೋಜನ ಕೂಟ ಏರ್ಪಡಿಸಿದ್ದೇನೆ. ಭೋಜನ ಕೂಟ ಏರ್ಪಡಿಸುವುದೇ ರಾಜಕೀಯ ಚರ್ಚೆ ಮಾಡುವುದಕ್ಕೆ. ಇದರಲ್ಲಿ ತಪ್ಪೇನು ಇಲ್ಲ ಎಂದರು.