ಪಿ.ಜಿ.ಆರ್.ಸಿಂಧ್ಯಾ ಚಿಕ್ಕಪೇಟೆಯಿಂದ ಸ್ಪರ್ಧೆ?
Team Udayavani, Jan 12, 2018, 6:30 AM IST
ಬೆಂಗಳೂರು: ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರನ್ನು ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಜೆಡಿಎಸ್ ಮುಂದಾಗಿದೆ. ನಗರದಲ್ಲಿ ಐದು ಸ್ಥಾನ ಗೆಲ್ಲುವ ಗುರಿ ಹೊಂದಿರುವ ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.
ಹಿರಿಯ ನಾಯಕ ಪಿ.ಜಿ.ಆರ್. ಸಿಂಧ್ಯಾ ಅವರನ್ನು ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧೆಗಿಳಿಸುವ ಬಗ್ಗೆ ಚಿಂತನೆ ನಡೆಸಿದೆ. ಸಿಂಧ್ಯಾ ಅವರು ವೈಯಕ್ತಿಕ ವರ್ಚಸ್ಸು ಹೊಂದಿರುವುದರಿಂದ ಜಯನಗರ, ಚಿಕ್ಕಪೇಟೆ, ಬಸವನಗುಡಿ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಇಳಿಸಬಹುದು ಎಂಬ ಸಮಾಲೋಚನೆ ಪಕ್ಷದ ವಲಯದಲ್ಲಿ ನಡೆದು ಚಿಕ್ಕಪೇಟೆ ಕ್ಷೇತ್ರ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡರು, ಸಿಂಧ್ಯಾ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆಗಿಳಿಸಲು ಬಯಸಿದ್ದರು. ಆದರೆ, ಬೆಂಗಳೂರು ನಗರದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಉದ್ದೇಶದಿಂದ ಅವರನ್ನು ವಿಧಾನಸಭೆಗೆ ನಿಲ್ಲಿಸಲು ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.