ಪ್ರಕಾಶ್ ಜಾವಡೇಕರ್ ಕರ್ನಾಟಕ ಬಿಜೆಪಿ ಉಸ್ತುವಾರಿ
Team Udayavani, Aug 25, 2017, 6:05 AM IST
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾಬ್ಡೇಕರ್ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಇದೇ ಮೊದಲ ಬಾರಿ ಚುನಾವಣಾ ಸಹ ಉಸ್ತುವಾರಿಯನ್ನೂ ನೇಮಕ ಮಾಡಲಾಗಿದ್ದು, ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ (ಸ್ವತಂತ್ರ) ಪಿಯೂಷ್ ಗೋಯಲ್ ಅವರಿಗೆ ಈ ಜವಾಬ್ದಾರಿ ವಹಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆಯಂತೆ ಈ ನೇಮಕಾತಿ ಮಾಡಲಾಗಿದೆ. ವಿಶೇಷವೆಂದರೆ, ಚುನಾವಣಾ ಉಸ್ತುವಾರಿ ಮತ್ತು ಸಹ ಉಸ್ತುವಾರಿ ಇಬ್ಬರೂ ಪಕ್ಕದ ಮಹಾರಾಷ್ಟ್ರ ರಾಜ್ಯದವರು.
ರಾಜ್ಯದಲ್ಲಿ 2004, 2008ರಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಯಾಗಿದ್ದ ಅರುಣ್ ಜೇಟ್ಲಿ ಅವರನ್ನೇ 2018ರ ವಿಧಾನಸಭೆ ಚುನಾವಣೆಗೂ ಉಸ್ತುವಾರಿಯಾಗಿ ನೇಮಕ ಮಾಡಬೇಕು ಎಂದು ಪಕ್ಷದ ರಾಜ್ಯ ಘಟಕದಿಂದ ಪ್ರಸ್ತಾವನೆ ಹೋಗಿತ್ತು. ಆದರೆ, ಕರ್ನಾಟಕ್ಕಿಂತಲೂ ಗುಜರಾತ್ ವಿಧಾನಸಭೆ ಚುನಾವಣೆ ಬಿಜೆಪಿ ಪಾಲಿಗೆ ಹೆಚ್ಚು ಪ್ರತಿಷ್ಠೆಯಾಗಿರುವುದರಿಂದ ಜೇಟಿÉ ಅವರನ್ನು ಗುಜರಾತ್ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಅತ್ಯಂತ ಕ್ರಿಯಾಶೀಲ ಎಂದೇ ಹೇಳಲಾಗುತ್ತಿರುವ ಪ್ರಕಾಶ್ ಜಾಬ್ಡೇಕರ್ ಅವರಿಗೆ ಕರ್ನಾಟಕದ ಜವಾಬ್ದಾರಿ ವಹಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಪ್ರಕಾಶ್ ಜಾಬ್ಡೇಕರ್ ನೇಮಕದ ಹಿಂದೆ ಪಶ್ಚಿಮ ಘಟ್ಟ ಮತ್ತು ಕರಾವಳಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸದೃಢಗೊಳಿಸುವ ಉದ್ದೇಶವೂ ಇದೆ ಎಂದು ಹೇಳಲಾಗಿದೆ. ಪಶ್ಚಿಮ ಘಟ್ಟ ಪ್ರದೇಶವನ್ನು ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸುವ ಕುರಿತ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ವಿಚಾರದಲ್ಲಿ ಜಾಬ್ಡೇಕರ್ ಅವರು ಪರಿಸರ ಸಚಿವರಾಗಿದ್ದಾಗ ನಾಲ್ಕನೇ ಬಾರಿ ಕರಡು ಅಧಿಸೂಚನೆ ಹೊರಡಿಸಿ ವಿಳಂಬ ಧೋರಣೆ ಅನುಸರಿಸುವ ಮೂಲಕ ರಾಜ್ಯಕ್ಕೆ ಅನುಕೂಲ ಮಾಡಿಕೊಟ್ಟಿದ್ದರು. ಇದರ ಪ್ರಯೋಜನ ಪಡೆಯುವ ಉದ್ದೇಶವೂ ಇದೆ ಎಂದು ಹೇಳಲಾಗಿದೆ.
ಏಕಪಕ್ಷೀಯ ನಿರ್ಧಾರಗಳಿಗೆ ಕಡಿವಾಣ?:
ಪ್ರಕಾಶ್ ಜಾಬ್ಡೇಕರ್ ಅವರನ್ನು ರಾಜ್ಯ ಚುನಾವಣಾ ಉಸ್ತುವಾರಿಯಾಗಿ ನೇಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನಿರ್ಧಾರದ ಹಿಂದೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳಿಗೆ ಕಡಿವಾಣ ಹಾಕುವ ಉದ್ದೇಶವೂ ಇದೆ ಎಂದು ಹೇಳಲಾಗಿದೆ.
ಪ್ರಕಾಶ್ ಜಾಬ್ಡೇಕರ್ ಅವರು ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ಆತ್ಮೀಯರು. ಹೀಗಾಗಿ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುವ ಸಂದರ್ಭದಲ್ಲಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಲಿದ್ದಾರೆ. ಈ ಅಂಶ ಕೂಡ ಪಕ್ಷದ ರಾಜ್ಯ ಘಟಕದಲ್ಲಿ ಆಂತರಿಕವಾಗಿರುವ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲು ಸಹಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದೇ ಮೊದಲ ಬಾರಿ ಚುನಾವಣಾ ಸಹ ಉಸ್ತುವಾರಿ:
ಬಿಜೆಪಿಯಲ್ಲಿ ಎಲ್ಲಾ ರಾಜ್ಯಗಳಿಗೆ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಲಾಗುತ್ತದೆ. ಜತೆಗೆ ಚುನಾವಣೆ ಬಂದಾಗ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡುವುದು ಸಂಪ್ರದಾಯ. ಚುನಾವಣಾ ಉಸ್ತುವಾರಿಗಳು ಮತ್ತು ಪಕ್ಷದ ಉಸ್ತುವಾರಿ ವಹಿಸಿಕೊಂಡವರು ಹೊಂದಾಣಿಕೆಯಿಂದ ಕಾರ್ಯತಂತ್ರಗಳನ್ನು ರೂಪಿಸಬೇಕು. ಆದರೆ, ಇದೇ ಮೊದಲ ಬಾರಿ ಕರ್ನಾಟಕಕ್ಕೆ ಚುನಾವಣಾ ಸಹ ಉಸ್ತುವಾರಿಯನ್ನೂ (ಪಿಯೂಷ್ ಗೋಯಲ್) ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿರುವ ಮುರಳೀಧರರಾವ್ ಅವರ ಬಗ್ಗೆ ಅನೇಕರಲ್ಲಿ ಅಸಮಾಧಾನ ಇರುವ ಕಾರಣ ಚುನಾವಣೆ ಸಂದರ್ಭದಲ್ಲಿ ಅವರಿಗೆ ಹೆಚ್ಚು ಜವಾಬ್ದಾರಿ ನೀಡುವ ಬದಲು ಚುನಾವಣಾ ಸಹ ಉಸ್ತುವಾರಿಯನ್ನು ನೇಮಿಸುವ ಮೂಲಕ ಈ ಅಸಮಾಧಾನವನ್ನು ಹೋಗಲಾಡಿಸುವ ಪ್ರಯತ್ನವನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮಾಡಿದ್ದಾರೆ.
ಸಂತೋಷ್ಗೆ ಹೆಚ್ಚಿನ ಜವಾಬ್ದಾರಿ
*ರಾಜ್ಯ ಬಿಜೆಪಿಲ್ಲಿ ಭಿನ್ನಮತ ಉದ್ಭವಿಸಿದಾಗ ಯಡಿಯೂರಪ್ಪ ಅವರ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರಿಗೆ ಕರ್ನಾಟಕದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂತೋಷ್ ಅವರು ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿಯಾಗಿದ್ದರು. ನಂತರದಲ್ಲಿ ಅವರಿಬ್ಬರ ಸಂಬಂಧ ಹಳಸಿದ್ದರಿಂದ ಸಂತೋಷ್ ಅವರನ್ನು ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ) ನೇಮಕ ಮಾಡಲಾಗಿತ್ತು. ಈ ಮಧ್ಯೆ ಸಂತೋಷ್ ಅವರಿಗೆ ದಕ್ಷಿಣ ಭಾರತದ ಉಸ್ತುವಾರಿ ವಹಿಸಿದ್ದ ಪಕ್ಷ, ಇದೀಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅವರನ್ನು ರಾಜ್ಯಕ್ಕೂ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ಚಲೋ ಹೋರಾಟದ ಉಸ್ತುವಾರಿಯನ್ನು ಸಂತೋಷ್ ಅವರಿಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್