ರಫೇಲ್ ಅವ್ಯವಹಾರ ಪ್ರಧಾನಿ ಹೊಣೆ :ಮಲ್ಲಿಕಾರ್ಜುನ ಖರ್ಗೆ
Team Udayavani, Sep 23, 2018, 6:05 AM IST
ಬೆಂಗಳೂರು: ರಫೇಲ್ ಯುದ್ದ ವಿಮಾನ ಅವ್ಯವಹಾರ ಬಹಿರಂಗಗೊಂಡಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈವಾಡ ಇರುವುದು ಗೊತ್ತಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಫೇಲ್ ಯುದ್ದ ವಿಮಾನ ಖರೀದಿಗೆ ಹಗರಣದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ ಎಲ್ಲರೂ ಅಲ್ಲಗಳೆದಿದ್ದರು. ಆದರೆ, ಫ್ರಾನ್ಸ್ನ ಮಾಜಿ ಪ್ರಧಾನಿಗಳೇ ಈ ಬಗ್ಗೆ ಹೇಳಿರುವುದರಿಂದ ಇದರ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿಯೇ ಹೊರಬೇಕು. ಪ್ರಧಾನಿ ನರೇಂದ್ರ ಮೋದಿ ಒತ್ತಡ ಹೇರಿ ರಿಲಾಯನ್ಸ್ ಕಂಪನಿಗೆ ನೀಡಿರುವುದರಿಂದ 35 ಸಾವಿರ ಕೋಟಿ ರೂ.ಅವ್ಯವಹಾರ ನಡೆದಿದೆ. ಈ ಬಗ್ಗೆ ಜಂಟಿ ಸದನ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಒಡಕು ಮೂಡಿಸುವುದೇ ಬಿಜೆಪಿಯ ಕೆಲಸವಾಗಿದೆ. ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ಥಿತ್ವದಲ್ಲಿದೆ. ಅದನ್ನು ಉರುಳಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ದಂಗೆ ಪದವನ್ನು ಬಳಸಿರುವುದಕ್ಕೆ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ನಮ್ಮದೇ ಇದೆ ಎಂದು ಸರ್ವಾಧಿಕಾರಿ ಪ್ರವೃತ್ತಿ ತೋರಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು. ಎಸ್ಸಿ ಎಸ್ಟಿ ನೌಕರರ ಹಿತ ಕಾಯಲು ಬಡ್ತಿ ಮೀಸಲಾತಿ ಕಾನೂನನ್ನು ಜಾರಿಗೆ ತರುವಂತೆ ಮುಖಮಂತ್ರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.