ರಾಜ್ಯದಲ್ಲಿ ಮಳೆ ಇಳಿಮುಖ
Team Udayavani, Aug 23, 2018, 6:40 AM IST
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ, ಕೊಡಗು, ಮಲೆನಾಡಲ್ಲಿ ಅಬ್ಬರಿಸುತ್ತಿದ್ದ ಮಳೆ ಕಡಿಮೆಯಾಗಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ನಲ್ಲಿ ರಾಜ್ಯದಲ್ಲಿಯೇ ಅಧಿಕ, 11 ಸೆಂ.ಮೀ.ಮಳೆ ಸುರಿಯಿತು.
ಕರಾವಳಿಯ ವಿವಿಧೆಡೆ ಬುಧವಾರ ಮಳೆ ಪ್ರಮಾಣ ಇಳಿಮುಖವಾಗಿದ್ದು, ಅನೇಕ ಕಡೆಗಳಲ್ಲಿ ಬಿಸಿಲಿನ ವಾತಾವರಣವಿತ್ತು. ಮಂಗಳೂರು ನಗರದಲ್ಲಿ ಸಂಜೆ ವೇಳೆಗೆ ಹಗುರದಿಂದ ಕೂಡಿದ ಮಳೆಯಾಗಿದ್ದು, ಉಳಿದ ಸಮಯದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣವಿತ್ತು. ಬಂಟ್ವಾಳ, ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಇಳಿಕೆಯಾಗಿ ಚಿಕ್ಕೋಡಿ ತಾಲೂಕಿನ ಎರಡು ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ಕೃಷ್ಣಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಯಥಾಸ್ಥಿತಿಯಲ್ಲಿದೆ.
ಈ ಮಧ್ಯೆ, ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.