ಬಿಎಸ್ವೈ ಭೇಟಿ ಮಾಡಿದ ರೆಡ್ಡಿ ?
Team Udayavani, Nov 18, 2018, 6:10 AM IST
ಬೆಂಗಳೂರು: ಆ್ಯಂಬಿಡೆಂಟ್ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನರೆಡ್ಡಿ ಶುಕ್ರವಾರ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.
ಆ್ಯಂಬಿಡೆಂಟ್ ಪ್ರಕರಣದಲ್ಲಿ ತಮ್ಮ ಪಾತ್ರ ಇಲ್ಲದಿದ್ದರೂ ರಾಜಕೀಯ ಕಾರಣಕ್ಕೆ ಸಿಲುಕಿಸಲಾಗಿದೆ. ಬೇಕಂತಲೇ ತೊಂದರೆ ನೀಡಲಾಗುತ್ತಿದೆ. ಪಕ್ಷ ಇಂತಹ ಸಂದರ್ಭದಲ್ಲಿ ನನ್ನ ಜತೆ ನಿಲ್ಲಬೇಕಿತ್ತು ಎಂಬ ಅವಲತ್ತುಕೊಂಡರು ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆ ಹಾಗೂ ಇತ್ತೀಚೆಗಿನ ಉಪ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಿದ್ದರಿಂದ ನನ್ನನ್ನು ಟಾರ್ಗೆಟ್ ಮಾಡಲಾಯಿತು. ನನ್ನ ಪರ ಪಕ್ಷದ ನಾಯಕರು ಬೆಂಬಲಕ್ಕೆ ನಿಲ್ಲಲಿಲ್ಲ. ಹೀಗಾದರೆ ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರು, ಜನಾರ್ದನರೆಡ್ಡಿ ಅವರನ್ನು ಸಮಾಧಾನಪಡಿಸಿ ನಾವೆಲ್ಲಾ ನಿಮ್ಮೊಂದಿಗಿದ್ದೇವೆ. ನಿಮ್ಮ ವಿರುದ್ಧ ಪ್ರಕರಣ ದಾಖಲು ಸೂಕ್ಷ್ಮ ವಿಚಾರ. ಕೆಲವೊಮ್ಮೆ ಪಕ್ಷದ ನಾಯಕರು ಬಹಿರಂಗವಾಗಿ ಮಾತನಾಡಲು ಆಗುವುದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮುಂದುವರಿಸಿ ಎಚ್ಚರಿಕೆಯಿಂದ ಇರಿ ಎಂದು ಹೇಳಿದರು ಎನ್ನಲಾಗಿದೆ.