ಮಳೆಹಾನಿ ಪರಿಹಾರಕ್ಕೆ 200 ಕೋಟಿ ಬಿಡುಗಡೆ
Team Udayavani, Aug 17, 2018, 6:00 AM IST
ಬೆಂಗಳೂರು: ಭಾರೀ ಮಳೆ ಮತ್ತು ಭೂಕುಸಿತದಿಂದ ಅನಾಹುತಕ್ಕೆ ಒಳಗಾಗಿರುವ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರ 200 ಕೋಟಿ ರೂ. ಬಿಡುಗಡೆ ಮಾಡಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಈ ಅನುದಾನ ಬಿಡುಗಡೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉದ್ಭವವಾಗಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಳೆಯಿಂದಾಗಿ ಈ ಜಿಲ್ಲೆಗಳಲ್ಲಿ ಸಂಭವಿಸಿರುವ ನಷ್ಟದ ಕುರಿತು ಎರಡು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 237.55 ಲಭ್ಯವಿದ್ದು, ಇದನ್ನು ಬಳಸಿಕೊಂಡು ತುರ್ತು ಕಾರ್ಯ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ. ಇದರೊಂದಿಗೆ ಆರು ಜಿಲ್ಲೆಗಳಿಗೆ ಸೀಮಿತವಾಗಿ ಹೆಚ್ಚುವರಿಯಾಗಿ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ಕೊಡಗಿನಲ್ಲಿ ವಾಡಿಕೆಗಿಂತ ಶೇ. 175ರಷ್ಟು, ಉಡುಪಿಯಲ್ಲಿ ಶೇ. 62ರಷ್ಟು, ಶಿವಮೊಗ್ಗದಲ್ಲಿ ಶೇ. 117ರಷ್ಟು, ಚಿಕ್ಕಮಗಳೂರಿನಲ್ಲಿ ಶೇ. 170ರಷ್ಟು, ಹಾಸನದಲ್ಲಿ ಶೇ. 130ರಷ್ಟು, ಉತ್ತರಕನ್ನಡ ಜಿಲ್ಲೆಯಲ್ಲಿ ಶೇ. 81ರಷ್ಟು ಹೆಚ್ಚುವರಿ ಮಳೆಯಾಗಿದೆ. ಈ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿಯೇ ವಾಸ್ತವ್ಯ ಹೂಡಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮಳೆ ಸಂತ್ರಸ್ತರಿಗಾಗಿ 29 ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 1755 ಜನರಿಗೆ ಆಶ್ರಯ ನೀಡಲಾಗಿದೆ ಎಂದು ತಿಳಿಸಿದರು.
ಮಳೆಯಿಂದಾಗಿ ಕೊಡಗಿನಲ್ಲಿ ಇಬ್ಬರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆಯಿಂದಾಗಿ ವಿರಾಜಪೇಟೆಯ ಗ್ರಾಮವೊಂದು ದ್ವೀಪದಂತಾಗಿ ಗ್ರಾಮಸ್ಥರು ಅಲ್ಲೇ ಉಳಿದಿದ್ದು, ಸೇನೆಯ ರಕ್ಷಣೆ ಕೋರಲಾಗಿದೆ. ಅದರಂತೆ ಅವರನ್ನು ರಕ್ಷಿಸಲು ಹೆಲಿಕಾಪ್ಟರ್ಗಳು ಸಿದ್ಧವಾಗಿದೆಯಾದರೂ ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆ ಸಾಧ್ಯವಾಗಿಲ್ಲ. ಶುಕ್ರವಾರ ಅವರನ್ನು ರಕ್ಷಿಸಲಾಗುವುದು. ಗ್ರಾಮದಲ್ಲಿ ಉಳಿದಿರುವವರಿಗೆ ಆಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮಳೆಹಾನಿ ಬಗ್ಗೆ ಇನ್ನೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳ ವರದಿ ಸರ್ಕಾರದ ಕೈಸೇರಲಿದ್ದು, ಅದನ್ನು ಆಧರಿಸಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೆ, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಅಧಿಕಾರಿಗಳು ಅಲ್ಲಿಯೇ ಇದ್ದು ಪರಿಹಾರ ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದರು.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಹವಾಮಾನ ವೈಪರೀತ್ಯದಿಂದ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲ. ಅಷ್ಟಕ್ಕೂ ರಾಜ್ಯದಲ್ಲಿ ಪರಿಸ್ಥಿತಿ ಅಷ್ಟೊಂದು ಗಂಭೀರ ಸ್ಥಿತಿಗೆ ತಲುಪಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅಗತ್ಯ ಬಿದ್ದರೆ ವೈಮಾನಿಕ ಸಮೀಕ್ಷೆ ನಡೆಸಲು ಸಿದ್ಧ ಎಂದು ಹೇಳಿದರು.
ಸಚಿವರಾದ ಆರ್.ವಿ.ದೇಶಪಾಂಡೆ, ಕೃಷ್ಣಬೈರೇಗೌಡ, ಯು.ಟಿ.ಖಾದರ್, ಸಾ.ರ.ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?