ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ:ಆರ್.ಅಶೋಕ್
Team Udayavani, Aug 7, 2018, 6:25 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮೀಕ್ಷೆ ನಡೆಯಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಪಕ್ಷದ ವತಿಯಿಂದ ಸಮೀಕ್ಷೆ ನಡೆಸಲಾಗಿತ್ತು. ಇದೀಗ ಲೋಕಸಭೆ ಚುನಾವಣೆಗೂ ಅಭ್ಯರ್ಥಿಗಳ ಆಯ್ಕೆಗೆ ಮುನ್ನ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.
ಸಮೀಕ್ಷೆಯ ವರದಿ ನಂತರ ಅಭ್ಯರ್ಥಿಗಳ ಆಯ್ಕೆ ಹಾಗೂ ಘೋಷಣೆ ನಡೆಯಲಿದೆ. ಬಿಜೆಪಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದು ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗುವುದು ಖಚಿತ ಎಂದು ತಿಳಿಸಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿರುವ ಕಾಂಗ್ರೆಸ್-ಜೆಡಿಎಸ್ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದು ಹೇಳಿದೆ. ಇದು ಎರಡೂ ಪಕ್ಷಗಳಲ್ಲಿ ಒಗ್ಗಟ್ಟಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಲೇವಡಿ ಮಾಡಿದರು.
ಒಗ್ಗಟ್ಟಿನ ಕೊರತೆಯಿಂದ ಎರಡೂ ಪಕ್ಷಗಳು ಮೈತ್ರಿಗೆ ಸಿದ್ಧವಿಲ್ಲ. ಇಬ್ಬರಲ್ಲೂ ನಂಬಿಕೆ ಹೋಗಿದೆ, ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಏನಾಗುತ್ತದೆಯೋ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ನಿಜ. ಚುನಾವಣೆಗೆ ಮುನ್ನವೇ ಸರ್ಕಾರ ಬೀಳಬಹುದು ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಹೋದರೆ ಬಿಜೆಪಿಗೆ ಲಾಭವಾಗಲಿದೆ. ಎರಡೂ ಪಕ್ಷಗಳಲ್ಲಿ ಸ್ಥಳೀಯವಾಗಿ ಮೈತ್ರಿಗೆ ವಿರೋಧವಿದ್ದು ಆ ಪಕ್ಷಗಳ ನಾಯಕರು ಬಿಜೆಪಿಗೆ ಬರಲು ಸಜ್ಜಾಗುತ್ತಿದ್ದಾರೆ ಎಂದು ತಿಳಿಸಿದರು.
ಆಗಸ್ಟ್ 9 ರಿಂದ ರಾಜ್ಯ ಪ್ರವಾಸಕ್ಕೆ ತಂಡ ಸಿದ್ಧವಿದೆ. ರೈತರ ಸಂಪೂರ್ಣ ಸಾಲ ಮನ್ನಾ ಒತ್ತಾಯಿಸಿ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ತಿಳಿಸಲು ಪ್ರವಾಸ ಕೈಗೊಳ್ಳಲಿದ್ದೇವೆ. ಸಾಲ ಮನ್ನಾ ವಿಚಾರದಲ್ಲಿ ಗೊಂದಲ ಇದೆ. ಸರ್ಕಾರ ಈ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ.
– ಆರ್.ಅಶೋಕ್.