ನಗರದ 4 ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
Team Udayavani, Feb 10, 2019, 6:34 AM IST
ಬೆಂಗಳೂರು: ವಿಕ್ಟೋರಿಯಾ ಹಾಗೂ ಜಯದೇವ ಮಾದರಿಯ ಆಸ್ಪತ್ರೆಗಳನ್ನು ನಗರದ ನಾಲ್ಕೂ ಭಾಗಗಳಲ್ಲಿ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಗೋವಿಂದರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿ ಸಾರ್ವಜನಿಕ ಸೇವಾ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರದ ಎಲ್ಲ ಜನರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಬೇಕೆಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ. ಆ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಜಾಗದ ಹುಡುಕಾಟದಲ್ಲಿ ತೊಡಗಿದೆ ಎಂದು ಹೇಳಿದರು.
ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ನಿತ್ಯ ಸಾವಿರಾರು ವಾಹನಗಳು ನೋಂದಣಿಯಾಗುತ್ತಿವೆ. ಪರಿಣಾಮ ನಗರದ ಪ್ರಮುಖ ಭಾಗಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ಸಾರ್ವಜನಿಕ ಸಾರಿಗೆ ಬಳಸಲು ಮುಂದಾದರೆ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ. ಜತೆಗೆ ಪಾರ್ಕಿಂಗ್ ಸಮಸ್ಯೆ ನಿವಾರಣೆಗಾಗಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ನಗರದ ಜನಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕಾವೇರಿ 5ನೇ ಹಂತದ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಇದು ಕಾವೇರಿಯಿಂದ ನೀರು ತರುವ ಕೊನೆಯ ಹಂತವಾಗಿದೆ. ಹೀಗಾಗಿ ತಿಪ್ಪಗೊಂಡನಹಳ್ಳಿ ಶುದ್ಧೀಕರಣ, ಹೇಮಾವತಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ತರುವ ಯೋಜನೆಯಿದೆ ಎಂದು ಮಾಹಿತಿ ನೀಡಿದರು.
ಗೋವಿಂದರಾಜನಗರ ಕ್ಷೇತ್ರದಲ್ಲಿ 7 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿದ್ದು, ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ಸುಸಜ್ಜಿತ ಸೇವಾ ಸಂಕೀರ್ಣ ನಿರ್ಮಿಸಿರುವುದು ಶ್ಲಾಘನೀಯ. ಈ ಸಂಕೀìದಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವುದು ಸಂತಸದ ವಿಚಾರ. ಇದೇ ರೀತಿ ಉಳಿದ ವಾರ್ಡ್ಗಳಲ್ಲಿಯೂ ಉದ್ಯಾನ, ಗ್ರಂಥಾಲಯ ಹಾಗೂ ರಸ್ತೆ ಮೇಲ್ದರ್ಜೆಗೇರಿಸುವ ಕೆಲಸಗಳಿಗೆ ಆದ್ಯತೆ ನೀಡಬೇಕಿದೆ ಎಂದು ಪರಮೇಶ್ವರ್ ಹೇಳಿದರು.
ಶಾಸಕ ವಿ.ಸೋಮಣ್ಣ ಮಾತನಾಡಿ, ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ಸಾರ್ವಜನಿಕ ಸೇವಾ ಸಂಕೀìಣ ಕೇಂದ್ರ ಆರಂಭಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ರಾಜಕೀಯ ಮಾಡುವುದು ಬೇಡ. ರಾಜಕೀಯ ನಿಂತ ನೀರಲ್ಲ ರಾಜ್ಯದಲ್ಲಿ ದೇವರಾಜ ಅರಸು, ವೀರೇಂದ್ರ ಪಾಟೀಲ್, ಜೆ.ಎಚ್.ಪಟೇಲ್ ಸೇರಿದಂತೆ ಹಲವಾರು ಗಣ್ಯರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ್ದು, ಅವರ ಹಾದಿಯಲ್ಲಿ ನಾವೇಲ್ಲ ಸಾಗಬೇಕಿದೆ ಎಂದರು.
ಚೆನ್ನೈ ನಗರದಲ್ಲಿ 8 ಎಕರೆ ಪ್ರದೇಶದಲ್ಲಿ ಬಹುದೊಡ್ಡ ಗ್ರಂಥಾಲಯವಿದ್ದು, ಅದೇ ಮಾದರಿಯಲ್ಲಿ ನಮ್ಮ ಕ್ಷೇತ್ರದಲ್ಲಿಯೂ ಎರಡೂವರೆ ಎಕರೆ ಜಾಗದಲ್ಲಿ ಗ್ರಂಥಾಲಯ ಸ್ಥಾಪಿಸುವ ಯೋಜನೆಯಿದೆ. ಜತೆಗೆ ಐಎಎಸ್ ಮತ್ತು ಐಪಿಎಸ್ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಮೇಯರ್ ಗಂಗಾಂಬಿಕೆ, ಉಪಮೇಯರ್ ಭದ್ರೇಗೌಡ, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ, ಅ.ದೇವೇಗೌಡ, ಪಾಲಿಕೆ ಸದಸ್ಯರಾದ ಶಾಂತಕುಮಾರಿ, ಉಮೇಶ್ ಶೆಟ್ಟಿ, ಶಿಲ್ಪ ಶ್ರೀಧರ್, ಮಧುಕುಮಾರಿ ವಾಗೀಶ್ ಮೋಹನ್ ಕುಮಾರ್, ಆನಂದ್ ಪಿ.ಹೊಸೂರು, ದಾಸೇಗೌಡ ಸೇರಿದಂತೆ ಪ್ರಮುಖರು ಹಾಜರಿದ್ದರು.
ಪರಮೇಶ್ವರ್ ಸಿಎಂ ಆಗ್ತಾರೆ – ವಿ.ಸೋಮಣ್ಣ: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮುಂದೊಂದು ದಿನ ಖಂಡಿತವಾಗಿಯೂ ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಜತೆಗೆ ನಲವತ್ತು ವರ್ಷಗಳ ಸ್ನೇಹವಿದ್ದು, ಶಾಸಕರಾಗಿದ್ದ ಸಂದರ್ಭದಲ್ಲಿ ಇಬ್ಬರೂ ಒಟ್ಟಿಗೆ ಕುಳಿತುಕೊಳ್ಳುತ್ತಿದ್ದೆವು.
ಸದ್ಯ ಅವರು ಉಪಮುಖ್ಯಮಂತ್ರಿಯಾಗಿದ್ದು, ಮುಂದೊಂದು ದಿನ ಖಂಡಿತ ಮುಖ್ಯಮಂತ್ರಿ ಆಗುತ್ತಾರೆ. ಅದೃಷ್ಟ ಇದ್ದರೆ ಯಾರು ಬೇಕಾದರೂ ಮುಖ್ಯಮಂತ್ರಿ ಆಗುತ್ತಾರೆ. ಕೇವಲ 38 ಸೀಟು ಗೆದ್ದ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿಲ್ಲವೇ? ಅವಕಾಶ ಇದ್ದರೆ ಯಡಿಯೂರಪ್ಪ ಅವರೂ ಆಗ್ತಾರೆ, ಯಾರು ಇಲ್ಲದಿದ್ದರೆ ನಾನೂ ಆಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.
ಇಂದಲ್ಲ ನಾಳೆ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಬೇಕು. ಆದರೆ, ಮಾಧ್ಯಮದವರು ಇದನ್ನು ದೊಡ್ಡ ವಿಷಯ ಮಾಡಿ ನನ್ನ ಹಾಗೂ ಯಡಿಯೂರಪ್ಪ ಮಧ್ಯೆ ಜಗಳ ತಂದಿಡುವುದು ಬೇಡ. ಹಿಂದೆ ಶ್ರೀರಾಮುಲು ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿದ್ದನ್ನೇ ದೊಡ್ಡ ವಿಷಯ ಮಾಡಲಾಗಿತ್ತು ಎಂದು ಹೇಳಿದರು.
ಸೋಮಣ್ಣ ಬಹಳ ಕ್ರಿಯಾಶೀಲ ವ್ಯಕ್ತಿಯಾಗಿದ್ದು, ಮೊದಲು ನಮ್ಮ ಪಕ್ಷದಲ್ಲಿಯೇ ಇದ್ದರು. ಸದಾ ನನ್ನ ಪಕ್ಕದ ಖುರ್ಚಿಯಲ್ಲಿಯೇ ಅವರೂ ಕೂರುತ್ತಿದ್ದರು. ಆದರೆ, ರಾತ್ರೋರಾತ್ರಿ ಪಕ್ಷ ಬಿಟ್ಟು ಹೋದರು. ಈಗ ಅವರಿಗೆ ಯಾಕೆ ಪಕ್ಷ ಬಿಟ್ಟು ಹೋದೆ ಎಂದು ಪಶ್ಚಾತಾಪವಾಗಿದೆ.
-ಡಾ.ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್