ಅನಿಲಭಾಗ್ಯ ಯೋಜನೆಗೆ ಇಂದು ಸಿಎಂ ಚಾಲನೆ
Team Udayavani, Feb 20, 2018, 6:05 AM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ “ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ಗೆ ಮಂಗಳವಾರ ಚಾಲನೆ ಸಿಗಲಿದೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ ಆರ್ಥಿಕವಾಗಿ ಹಿಂದುಳಿದ 10 ಲಕ್ಷ ಅರ್ಹ ಆದ್ಯತಾ ಪಡಿತರದಾರರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವುದು ಸರ್ಕಾರದ ಗುರಿ. ಯೋಜನೆಯ ಅರ್ಹ ಫಲಾನುಭವಿಗಳಿಗೆ 2 ಬರ್ನರ್ವುಳ್ಳ ಗ್ಯಾಸ್ ಸ್ಟೌವ್, 2 ರೀಫಿಲ್, ಒಂದು ರೆಗ್ಯುಲೇಟರ್ ಸೇರಿದಂತೆ ಒಟ್ಟು 4,040 ರೂ. ಮೌಲ್ಯದ ಪರಿಕರಗಳನ್ನು ಉಚಿತವಾಗಿ ವಿತರಿಸಲಿದೆ.
“ಹೊಗೆಮುಕ್ತ ಅಡುಗೆ ಮನೆ, ಪ್ರತಿ ಮಹಿಳೆ ಕನಸು- ನನಸು’ ಎಂಬ ಧ್ಯೇಯದೊಂದಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಾನೂನು ಮಾಪನಶಾಸ್ತ್ರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಸಂಜೆ 4.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಸಚಿವರಾದ ಕೆ.ಜೆ.ಜಾರ್ಜ್, ಆರ್.ರೋಷನ್ ಬೇಗ್, ರಮಾನಾಥ ರೈ, ಎಚ್.ಆಂಜನೇಯ, ಸಂತೋಷ್ ಲಾಡ್, ಕೃಷ್ಣ ಭೈರೇಗೌಡ, ಸಂಸದ ಪಿ.ಸಿ.ಮೋಹನ್, ಮೇಯರ್ ಆರ್.ಸಂಪತ್ರಾಜ್ ಇತರರು ಪಾಲ್ಗೊಳ್ಳಲಿದ್ದಾರೆ.