ಕೆಪಿಸಿಸಿ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೆಸರು!
Team Udayavani, Mar 27, 2018, 12:12 AM IST
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೆಸರು
ಸೇರಿಕೊಂಡಿದ್ದು ಈ ಕುರಿತು ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು.
ಬಿಜೆಪಿ ನಾಯಕ ಅರಬಾವಿ ಕ್ಷೇತ್ರದ ಹಾಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೆಸರನ್ನು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕ ಅರಬಾವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಹೆಸರು ಸೇರಿಸಿ ಕಳುಹಿಸಿದೆ. ಬೆಳಗಾವಿ ಜಿಲ್ಲಾ ಚುನಾವಣಾ ವೀಕ್ಷಕರಾಗಿ ಹೋಗಿದ್ದ ತಂಡವೂ ಅದೇ ಪಟ್ಟಿಯನ್ನು ಕೆಪಿಸಿಸಿ ಚುನಾವಣಾ ಸಮಿತಿ ಮುಂದೆ ಇಟ್ಟಿದೆ.
ಕಳೆದ ವಾರ ನಗರದ ಹೊರ ವಲಯದಲ್ಲಿ ನಡೆದ ಚುನಾವಣಾ ಸಮಿತಿ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೆಸರು ನೋಡಿ
ನಾಯಕರು ದಂಗಾಗಿದ್ದಾರೆ. ಅವರು ಕಾಂಗ್ರೆಸ್ಗೆ ಬರುವುದಾದರೆ ಮಾತುಕತೆ ನಡೆಸಿ, ಸೇರಿಸಿಕೊಳ್ಳುವಂತೆ ಕೆಲವು ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಬಾಲಚಂದ್ರ ಆಕಾಂಕ್ಷಿ ಅಲ್ಲದ ಕಾರಣ ಪಟ್ಟಿಯಿಂದ ಅವರ ಹೆಸರನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.