ಈ ವರ್ಷ ಬರ ಘೋಷಣೆ ಇಲ್ಲ: ಕಾಗೋಡು
Team Udayavani, Dec 7, 2017, 7:15 AM IST
ಬೆಂಗಳೂರು: “ರಾಜ್ಯದ 60 ತಾಲೂಕುಗಳಲ್ಲಿ ಮಳೆ ಕೊರತೆ ಉಂಟಾಗಿದೆಯಾದರೂ ಈ ವರ್ಷ ಬರಪೀಡಿತ ತಾಲೂಕು ಘೋಷಣೆ ಮಾಡುವ ಪ್ರಸ್ತಾಪ ಇಲ್ಲ ‘ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಂಗಾರು ಮತ್ತು ಹಿಂಗಾರಿನಲ್ಲಿ ಉತ್ತಮ ಮಳೆಯಾಗಿದೆಯಾದರೂ 60 ತಾಲೂಕುಗಳಲ್ಲಿ ವಾಡಿಕೆ ಮಳೆ ಬಿದ್ದಿಲ್ಲ. ಹೀಗಿದ್ದರೂ ಎಲ್ಲಾ ತಾಲೂಕುಗಳಲ್ಲಿ ಬರಪೀಡಿತ ಎಂದು ಘೋಷಿಸಲು ನಿಗದಿಪಡಿಸಿರುವ ಮಾನದಂಡಕ್ಕಿಂತ ಹೆಚ್ಚಿನ ಮಳೆಯಾಗಿದ್ದು, ಬರಪೀಡಿತ ತಾಲೂಕುಗಳ ಘೋಷಣೆ ಮಾಡುವ ಪ್ರಸ್ತಾಪ ಇಲ್ಲ’ ಎಂದರು.
ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲೂ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ. ಆದರೂ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.