ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ
Team Udayavani, Mar 25, 2017, 3:45 AM IST
ಬೆಂಗಳೂರು:ರಾಜ್ಯದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಇರುವುದರಿಂದ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ನೀರಾವರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
“ರಾಜ್ಯದಲ್ಲಿ ಜನರಿಗೆ ಈಗ ಕುಡಿಯುವುದಕ್ಕೆ ನೀರಿನ ಕೊರತೆ ಉಂಟಾಗಿದೆ. ಒಂದು ವೇಳೆ, ಕಾವೇರಿ ಜಲಾಶಯದಲ್ಲಿ ನೀರಿನ ಸಂಗ್ರಹ ಸೂಕ್ತ ಪ್ರಮಾಣದಲ್ಲಿ ಇದ್ದಿದ್ದರೆ, ತಮಿಳುನಾಡಿಗೆ ನೀರು ಹರಿಸಬಹುದಿತ್ತು. ಆದರೆ, ಈಗ ಕಾವೇರಿ ಜಲಾಶಯದಿಂದ ಬೆಂಗಳೂರು, ಮೈಸೂರು ಹಾಗೂ ಸುತ್ತಲಿನ ಹಳ್ಳಿಗಳಿಗೆ ನೀರು ಬಿಡುವುದಕ್ಕೆ ಸುಮಾರು 3ರಿಂದ 4 ಟಿಎಂಸಿ ನೀರಿನ ಕೊರತೆ ಎದುರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗಿರುವ ಬಗ್ಗೆ ಹಾಗೂ ಕಾವೇರಿ ಜಲಾಶಯದಲ್ಲಿನ ನೀರಿನ ಸಂಗ್ರಹದ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್ಗೆ ಮನವರಿಗೆ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ಗೆ ಕಾವೇರಿ ನದಿ ನೀರು ಬಗ್ಗೆ ಮನವರಿಕೆ ಮಾಡಿಕೊಡಲು ರಾಜ್ಯದ ಪರ ವಾದ ಮಂಡಿಸುತ್ತಿರುವ ವಕೀಲರ ತಂಡವು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಈ ಸಂಬಂಧ ಸರ್ಕಾರ ಕಾನೂನು ತಂಡದ ಜತೆಗೆ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ.