ಅಂತರ ಕಾಪಾಡಿದ ಮೈತ್ರಿ ಸರ್ಕಾರ
Team Udayavani, Nov 11, 2018, 6:00 AM IST
ಬೆಂಗಳೂರು: ವಿವಾದದ ಸ್ವರೂಪ ಪಡೆದಿರುವ ಟಿಪ್ಪು ಜಯಂತಿ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ನ ಕೆಲವು ನಾಯಕರು ಅಂತರ ಕಾಯ್ದುಕೊಳ್ಳುವ “ರಕ್ಷಣಾತ್ಮಕ’ ನಡೆ ಪ್ರದರ್ಶಿಸಿದ್ದಾರೆ.
ಮತ್ತೂಂದೆಡೆ ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಿಷೇಧಾಜ್ಞೆ ನಡುವೆಯೂ ಬಿಜೆಪಿ ಪ್ರತಿಭಟನೆ, ಮೆರವಣಿಗೆ ನಡೆಸಿದೆ. ಬಿಜೆಪಿ ಶಾಸಕರು, ಮುಖಂಡರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ರಾಜ್ಯ ಸರ್ಕಾರದ ವತಿಯಿಂದ ಶನಿವಾರ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದ ಕಾರ್ಯಕ್ರಮಕ್ಕೆ ಖುದ್ದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಾದರೆ, ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು, ಕಾಂಗ್ರೆಸ್-ಜೆಡಿಎಸ್ ಶಾಸಕರು ಕಾರ್ಯಕ್ರಮಕ್ಕೆ ಕೈ ಕೊಟ್ಟಿದ್ದಾರೆ.
ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಗೈರು ಹಾಜರಾಗಿದ್ದರು. ಮಡಿಕೇರಿಯಲ್ಲಿ ನಡೆದ ಟಿಪ್ಪು ಜಯಂತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಗೈರು ಹಾಜರಾಗಿದ್ದರು.
ಅರ್ಧಕ್ಕೇ ಮುಕ್ತಾಯ:
ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಬಿಜೆಪಿಯ ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಿಸುವುದು ಕೊಡಗಿಗೆ ಮಾಡುವ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕಾಂಗ್ರೆಸ್ ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಕಲಾ ಆಕ್ಷೇಪ ವ್ಯಕ್ತಪಡಿಸಿ, ಅವರನ್ನು ವೇದಿಕೆಯಿಂದ ಕೆಳಗೆ ಇಳಿಸುವಂತೆ ಒತ್ತಾಯಿಸಿದರು. ಇದಕ್ಕೆ ಬಿಜೆಪಿಯವರು ವಿರೋಧಿಸಿದರು. ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಅಪ್ಪಚ್ಚುರಂಜನ್, ಟಿಪ್ಪು ಜಯಂತಿ ಆಚರಿಸುವ ಅಗತ್ಯವಿಲ್ಲ. ಕಾರ್ಯಕ್ರಮ ಇಲ್ಲಿಗೆ ಮುಕ್ತಾಯಗೊಳಿಸಲಾಗಿದೆ ಎಂದು ಘೋಷಿಸಿದರು.
ಸರ್ಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ 10 ನಿಮಿಷದಲ್ಲಿ ಮುಕ್ತಾಯಗೊಂಡಿತು.
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಶಾಸಕ ಅಪ್ಪಚ್ಚು ರಂಜನ್, ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ವೀರಾಜಪೇಟೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ, ಸೋಮವಾರ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು. ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಶನಿವಾರ ಸಂತೆ ಬಂದ್ಗೆ ಕರೆನೀಡಲಾಗಿತ್ತು.
ಅನಿತಾ ಗೈರು:
ರಾಮನಗರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ ಗೈರು ಹಾಜರಾಗಿದ್ದರು. ಶಿವಕುಮಾರ್ ಅವರು ವಿಧಾನಸೌಧದಲ್ಲಿ ನಡೆದ ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವಿರೋಧ: ಚಿಕ್ಕಮಗಳೂರಿನಲ್ಲಿ ನಿಷೇಧಾಜ್ಞೆ ಇದ್ದರೂ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಮುಂದಾದ ಶಾಸಕ ಸಿ.ಟಿ.ರವಿ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ದಾವಣೆಗೆರೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು. ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಕಡೇ ಕ್ಷಣದಲ್ಲಿ ಕೈಕೊಟ್ಟ ಡಿಸಿಎಂ
ಪೂರ್ವ ನಿಯೋಜನೆಯಂತೆ ಡಿಸಿಎಂ ಪರಮೇಶ್ವರ್ ಅವರು ಬಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕಡೇ ಕ್ಷಣದಲ್ಲಿ ಕಾರಣಾಂತರದಿಂದ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಂದೇಶ ರವಾನಿಸಿ ಗೈರು ಹಾಜರಾದರು. ಈ ಹಿನ್ನೆಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಪರವಾಗಿ ತಾವು ಹಾಜರಾಗುವುದಾಗಿ ಹೇಳಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇಲ್ಲಿ ಡಿಸಿಎಂ ಪರಮೇಶ್ವರ್ ಅವರೂ ಅಂತರ ಕಾಪಾಡಿಕೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟ.
ಬಿಜೆಪಿಯವರು ಗೋಮುಖ ವ್ಯಾಘ್ರರು. ಅವರಿಗೆ ಯಾವುದೇ ವಿಷಯ ಇಲ್ಲದಿರುವುದಕ್ಕೆ ಟಿಪ್ಪು ಜಯಂತಿ ವಿರೋಧಿಸಿ ರಾಜಕಾರಣ ಮಾಡುತ್ತಿದ್ದಾರೆ. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಟಿಪ್ಪು ಸುಲ್ತಾನ್ನನ್ನು ಹೊಗಳಿರಲಿಲ್ಲವೇ? ಈಗೇಕೆ ವಿರೋಧ ಮಾಡುತ್ತಿದ್ದಾರೆ?
– ಸಿದ್ದರಾಮಯ್ಯ, ಮಾಜಿ ಸಿಎಂ
ದೇಶದಲ್ಲಿ ಟಿಪ್ಪು ಸುಲ್ತಾನ್ಗೆ ತನ್ನದೇ ಆದ ಚರಿತ್ರೆ ಇದ್ದು, ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕೆಲ ಬಿಜೆಪಿ ಸ್ನೇಹಿತರು ವಿರೋಧಿಸುತ್ತಿದ್ದಾರೆ. ಸುಮ್ಮನೆ ಯಾಕೆ ರಾಜಕಾರಣ ಮಾಡುತ್ತೀರಿ. ಅದನ್ನು ಮರೆತು ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದೊಯ್ಯೋಣ ಬನ್ನಿ.
– ಡಿ.ಕೆ.ಶಿವಕುಮಾರ್, ಸಚಿವ
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಪಾಲ್ಗೊಳ್ಳದೇ ಇರುವುದು ಮುಸ್ಮಿಮರಿಗೆ ಮಾಡಿದ ಅವಮಾನ ಎಂದು ಭಾವಿಸುವಂತಾಗಿದೆ. ಸಾಮ್ರಾಜ್ಯ ವಿಸ್ತರಣೆ ಮಾಡಿದ ಅನೇಕ ರಾಜರನ್ನು ದೇವರು ಎನ್ನುವಾಗ ಟಿಪ್ಪು ಸುಲ್ತಾನ್ ಅವರನ್ನು ಕಳ್ಳನ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ.
– ತನ್ವೀರ್ ಸೇಠ್ ಶಾಸಕ
ಕನ್ನಡ ವಿರೋಧಿ, ಮತಾಂಧ ಟಿಪ್ಪು ಜಯಂತಿ ಆಚರಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಅಸ್ತಿತ್ವ ತೋರಿಸುತ್ತಿದೆ. ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಜನತೆಯನ್ನು ಒಡೆಯುವ ಆಚರಣೆಗೆ ಮಾತ್ರ ಸರ್ಕಾರ ಸೀಮಿತವಾಗಿದೆ.
– ಸಿ.ಟಿ. ರವಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ