ಬುಡಕಟ್ಟು ಜನಾಂಗ: ವಾರದಲ್ಲಿ ವರದಿ ಸಲ್ಲಿಸಿ
Team Udayavani, Aug 4, 2018, 6:30 AM IST
ಬೆಂಗಳೂರು: ಅಲೆಮಾರಿ ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಸವಲತ್ತುಗಳನ್ನು ತಲುಪಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಾರದಲ್ಲಿ ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲೆಮಾರಿ, ಅರೆಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿಯಾದ ನಂತರ ಒಕ್ಕೂಟದ ನೇತೃತ್ವ ವಹಿಸಿದ್ದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಅಲೆಮಾರಿಗಳ ಅಭಿವೃದ್ಧಿಗೆ ಆಯೋಗ ಮತ್ತು ನಿಗಮ ಮಂಡಳಿ ರಚಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿದ ಕುಮಾರಸ್ವಾಮಿ, ಅಲೆಮಾರಿ ಜನಾಂಗಕ್ಕಾಗಿ 2008ರಲ್ಲಿ ಘೋಷಣೆ ಮಾಡಿದ ಯೋಜನೆಗಳು ಇದುವರೆಗೂ ತಲುಪಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳ ಧೋರಣೆಗಳು ಬದಲಾಗುವಂತೆ ತರಾಟೆಗೆ ತೆಗೆದುಕೊಂಡರು ಎಂದರು. ವಾರದಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಸಮಿತಿಯಲ್ಲಿ ಚರ್ಚೆ ನಡೆಸಿ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಕುರಿತು 15 ದಿನಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸೂಚಿಸಿದರು.